Published : Oct 31, 2023, 5:28 PM IST
|Updated : Oct 31, 2023, 7:36 PM IST
ಧಾರವಾಡ ಜಿಲ್ಲೆಯ ನಾಲ್ವರು ಸಾಧಕರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ.. ಖುಷಿ ಹಂಚಿಕೊಂಡ ಕುಸ್ತಿಪಟು
ಧಾರವಾಡ: ರಾಜ್ಯ ಸರ್ಕಾರದಿಂದ ಕೊಡಮಾಡುವ ರಾಜ್ಯೋತ್ಸವ ಪ್ರಶಸ್ತಿಗೆ ಜಿಲ್ಲೆಯ ನಾಲ್ವರು ಸಾಧಕರು ಆಯ್ಕೆಯಾಗಿದ್ದಾರೆ. ಇಬ್ಬರು ಮಹಿಳೆಯರು, ಇಬ್ಬರು ಪುರುಷ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ಸಂಗೀತ ಮತ್ತು ನೃತ್ಯ ಕ್ಷೇತ್ರದಲ್ಲಿ ನೀಲಾ ಎಂ ಕೊಡ್ಲಿ, ರಂಗಭೂಮಿ ಕ್ಷೇತ್ರದಲ್ಲಿ ಹೆಚ್ ಬಿ ಸರೋಜಮ್ಮ, ಕ್ರೀಡಾ ಕ್ಷೇತ್ರದಲ್ಲಿ ಅಶೋಕ್ ಏಣಗಿ, ಕೃಷಿ ಕ್ಷೇತ್ರದಲ್ಲಿ ದ್ಯಾವನಗೌಡ ಪಾಟೀಲ್ ಆಯ್ಕೆಯಾಗಿದ್ದಾರೆ. ನವೆಂಬರ್ 1ರಂದು ನಡೆಯುವ ಸಮಾರಂಭದಲ್ಲಿ ಸರ್ಕಾರ ಈ ಪ್ರಶಸ್ತಿ ನೀಡಲಿದೆ.
ರಾಜ್ಯೋತ್ಸವ ಪ್ರಶಸ್ತಿ ಪಡೆದುಕೊಂಡಿರುವ ಕ್ರೀಡಾ ಕ್ಷೇತ್ರದ ಸಾಧಕ ಅಶೋಕ ಏಣಗಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿ, 1994 ರಿಂದ 2014ರ ವರೆಗೆ ಕುಸ್ತಿ ಆಡಿದ್ದೇನೆ. ತಾಲೂಕಾ ಮಟ್ಟ, ಜಿಲ್ಲಾಮಟ್ಟ, ರಾಜ್ಯಮಟ್ಟದಲ್ಲಿ ಸಾಕಷ್ಟು ಕುಸ್ತಿ ಪಂದ್ಯಾವಳಿಯಲ್ಲಿ ವಿಜೇತನಾಗಿದ್ದೇನೆ. ಮೈಸೂರು ದಸರಾ ಕ್ರೀಡಾಕೂಟದಲ್ಲಿ ಎರಡು ಬಾರಿ ಕರ್ನಾಟಕ ಕೇಸರಿ ಪಂದ್ಯ ಡ್ರಾ ಮಾಡಿಕೊಂಡಿದ್ದೇನೆ. ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದೇನೆ. ಅದರ ಆಧಾರದಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿದ್ದೆ. ಇದೀಗ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕೆ ಖುಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹಾಗೂ ಕ್ಷೇತ್ರದ ಶಾಸಕರಿಗೆ ಧನ್ಯವಾದ ತಿಳಿಸುತ್ತೇವೆ ಎಂದರು.
ಇದನ್ನೂ ಓದಿ: ಇಸ್ರೋ ಅಧ್ಯಕ್ಷ ಸೋಮನಾಥ್, ನಟರಾದ ಡಿಂಗ್ರಿ ನಾಗರಾಜ್, ಬ್ಯಾಂಕ್ ಜನಾರ್ದನ ಸೇರಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ