thumbnail

ರಾಜ್ಯದಲ್ಲಿ ನೈಟ್​ ಕರ್ಫ್ಯೂ ಇಲ್ಲ, ನಿಯಮ ಉಲ್ಲಂಘಿಸಿದ್ರೆ ದಂಡ ಫಿಕ್ಸ್​: ಬಿಎಸ್​ವೈ

By

Published : Mar 15, 2021, 7:01 PM IST

Updated : Mar 15, 2021, 7:06 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಕಾರಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ​ ಅವರು ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ತಜ್ಞರ ಸಭೆ ನಡೆಸಿದರು. ಈ ವೇಳೆ ತಕ್ಷಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ಪ್ರಮುಖವಾಗಿ ಇದು ಕೋವಿಡ್​ನ ಎರಡನೇ ಅಲೆಯಾಗಿದ್ದು, ನಿಯಮ ಉಲ್ಲಂಘನೆ ಮಾಡಿದರೆ ದಂಡ ವಿಧಿಸಲಾಗುವುದು ಎಂದರು. ರಾಜ್ಯದಲ್ಲಿ ಲಾಕ್​ಡೌನ್​ ಬೇಡ ಅಂದರೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಇದೇ ವೇಳೆ, ನೈಟ್​ ಕರ್ಫ್ಯೂ ಮಾಡದಂತೆ ತಜ್ಞರ ಸಮಿತಿ ಸಲಹೆ ನೀಡಿದೆ ಎಂದರು. ಜಾತ್ರೆ, ಸಭೆ-ಸಮಾರಂಭ ಹಾಗೂ ಮನೆಯಿಂದ ಹೊರಗಡೆ ಹೋಗುವಾಗ ಮಾಸ್ಕ್​ ಧರಿಸುವುದು ಕಡ್ಡಾಯವಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾಗಿದೆ. ನಿಯಮ ಉಲ್ಲಂಘನೆ ಮಾಡಿದರೆ ಈ ಹಿಂದಿನಂತೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು. ಮದುವೆ, ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ 500 ಜನರು ಮಾತ್ರ ಭಾಗಿಯಾಗಲು ಕಾನೂನು ತರಲಾಗುವುದು. ಹೆಚ್ಚಿನ ಕೊರೊನಾ ಸೋಂಕು ಕಂಡು ಬಂದಿರುವ ಜಿಲ್ಲೆಗಳಲ್ಲಿ ಹೆಚ್ಚಿನ ಕೊರೊನಾ ವ್ಯಾಕ್ಸಿನ್​ ರವಾನೆ ಮಾಡುವುದು ಹಾಗೂ ಪರೀಕ್ಷೆ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಇದೇ ವೇಳೆ ಬೆಂಗಳೂರಿನ ಜನರಲ್ಲಿ ಬಿಎಸ್​ವೈ ವಿಶೇಷ ಮನವಿ ಮಾಡಿಕೊಂಡಿದ್ದು, ಲಾಕ್​ಡೌನ್​​ಗೆ ಅವಕಾಶ ಮಾಡಿಕೊಡಬೇಡಿ ಎಂದರು. ಇನ್ನು ಮಾರ್ಚ್​ 17ರಂದು ಬಿಎಸ್​ವೈ ಪ್ರಧಾನಿ ಮೋದಿ ಜತೆ ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗಿಯಾಗಿ ಚರ್ಚೆ ನಡೆಸಲಿದ್ದಾರೆ.
Last Updated : Mar 15, 2021, 7:06 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.