ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರಿಂದ ಹೆದ್ದಾರಿ ತಡೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಹೆದ್ದಾರಿ ತಡೆದು ಪ್ರತಿಭಟಿಸಿದರು. ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 04 ನ್ನು ತಡೆದು ರೈತ ವಿರೋಧಿ ಮಸೂದೆ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಾಯಿತು. ರಾಜ್ಯಾದ್ಯಂತ ನಡೆಯುತ್ತಿರುವ ಈ ಪ್ರತಿಭಟನೆಯ ಕಾವು ಜಿಲ್ಲೆಗೂ ತಟ್ಟಿದ್ದರಿಂದ ರೈತರು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟಿಸಿದರು. ಇನ್ನು ರೈತರ ಪ್ರತಿಭಟನೆಗೆ ಕ್ಯಾರೆ ಎನ್ನದ ಲಾರಿ ಚಾಲಕರು ತೆರಳಲು ಮುಂದಾದಾಗ ಲಾರಿ ಚಾಲಕರಿಗೂ ಹಾಗೂ ರೈತರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಮಧ್ಯೆ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ರೈತ ವಿರೋಧಿ ಸುಗ್ರೀವಾಜ್ಞೆ ಕೈಬಿಡಬೇಕು, ಪಂಜಾಬ್ ಸರ್ಕಾರದ ಎಂಎಸ್ಪಿ ಮಾದರಿಯನ್ನು ರಾಜ್ಯದಲ್ಲಿ ಜಾರಿಯಾಗಬೇಕು. ಕೇರಳ ಸರ್ಕಾರ ತರಕಾರಿಗೆ ಬೆಲೆ ನಿಗದಿ ಮಾಡಿರುವ ರೀತಿಯ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.