ನವದೆಹಲಿ: 2024ರ ಲೋಕಸಭೆ ಚುನಾವಣೆ ಘೋಷಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಚುನಾವಣಾ ಆಯೋಗ ಇಂದು ಮಹತ್ವದ ಸಭೆ ಕರೆದಿದೆ. ಈ ಸಭೆಯ ಅಧ್ಯಕ್ಷತೆಯನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ವಹಿಸಲಿದ್ದಾರೆ. ಈ ಸಭೆಯಲ್ಲಿ ಪೊಲೀಸ್, ಸಾಮಾನ್ಯ ಮತ್ತು ಇತರ ಅಧಿಕಾರಿಗಳು ಸೇರಿದಂತೆ ಎಲ್ಲಾ ಚುನಾವಣಾ ವೀಕ್ಷಕರು ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಸುಮಾರು 2,000 ಚುನಾವಣಾ ವೀಕ್ಷಕರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.
ಮುಂಬರುವ ಲೋಕಸಭೆ ಚುನಾವಣೆಗೆ ನಿಯೋಜನೆಗೊಳ್ಳಲಿರುವ ವೀಕ್ಷಕರಿಗಾಗಿ ಚುನಾವಣಾ ಆಯೋಗ ಈ ಸಭೆಯನ್ನು ಆಯೋಜಿಸಿದೆ. 2,000 ವೀಕ್ಷಕರ ಸಭೆಯಲ್ಲಿ ಆಯೋಗದ ಹಿರಿಯ ಅಧಿಕಾರಿಗಳು, ವಿವಿಧ ವಿಷಯಗಳ ಕುರಿತು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಲಿದ್ದಾರೆ. ಇನ್ನು ಈ ಸಭೆಯಲ್ಲಿ ಭಾರತೀಯ ಆಡಳಿತ ಸೇವೆ (IAS), ಭಾರತೀಯ ಪೊಲೀಸ್ ಸೇವೆ (IPS), ಭಾರತೀಯ ಕಂದಾಯ ಸೇವೆ (IRS) ಮತ್ತು ಇತರ ಸಂಬಂಧಿತ ಸೇವೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಚುನಾವಣೆ ಘೋಷಣೆಯಾಗುವ ಮುನ್ನವೇ ಮತಗಟ್ಟೆಗಳಲ್ಲಿ ವೀಕ್ಷಕರನ್ನು ನಿಯೋಜಿಸಲಾಗಿದೆ. ಈ ವೀಕ್ಷಕರು ರಾಜ್ಯಗಳಲ್ಲಿನ ಚುನಾವಣಾ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ.
ಚುನಾವಣಾ ಸಮಿತಿಯ ಮೂಲಗಳು ಪ್ರಕಾರ, ನವದೆಹಲಿಯಲ್ಲಿ ಸಭೆ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಲು ಸಿಇಸಿ ಶ್ರೀನಗರಕ್ಕೆ ಭೇಟಿ ನೀಡಲಿದ್ದಾರೆ. ಮಾರ್ಚ್ 12 ಮತ್ತು 13 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಅವರ ಭೇಟಿ ಲೋಕಸಭೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವ ಮೊದಲು ಯಾವುದೇ ರಾಜ್ಯ/ಕೇಂದ್ರಾಡಳಿತ ಪ್ರದೇಶಕ್ಕೆ ಅವರ ಕೊನೆಯ ಭೇಟಿಯಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಈ ಭೇಟಿಯ ಸಂದರ್ಭದಲ್ಲಿ, ಚುನಾವಣಾ ಸಮಿತಿಯು ರಾಜಕೀಯ ಪಕ್ಷಗಳು ಮತ್ತು ಸ್ಥಳೀಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ಪಕ್ಷಗಳನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
ಲೋಕಸಭೆ ಚುನಾವಣೆಯೊಂದಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆಯನ್ನು ಚುನಾವಣಾ ಆಯೋಗವು ನಿರ್ಣಯಿಸಬಹುದು ಎಂದು ಮೂಲಗಳು ತಿಳಿಸಿವೆ. ಆದರೂ ಇದು ಕೇವಲ ಊಹಾಪೋಹಗಳಾಗಿದ್ದು, ಸಿಇಸಿ ಭೇಟಿ ನೀಡಿ ಎಲ್ಲಾ ಮಧ್ಯಸ್ಥಗಾರರನ್ನು ಭೇಟಿಯಾದಾಗ ಮಾತ್ರ ಇದನ್ನು ಖಚಿತಪಡಿಸಬಹುದು ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯನ್ನು ಸೆಪ್ಟೆಂಬರ್ 30, 2024 ರೊಳಗೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಡಿಸೆಂಬರ್ 11, 2023 ರಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.
ಓದಿ: ಲೋಕಸಭೆ ಚುನಾವಣೆ ವೇಳಾ ಪಟ್ಟಿ ಪ್ರಕಟಕ್ಕೂ ಮುನ್ನವೇ ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ