ಪುಣೆ, ಮಹಾರಾಷ್ಟ್ರ: ನೀರಿನ ಟ್ಯಾಂಕ್ ಕುಸಿತದಿಂದಾಗಿ ಐದು ಜನ ಸಾವನ್ನಪ್ಪಿದ್ದು, ಅನೇಕ ಮಂದಿ ಗಾಯಗೊಂಡಿರುವ ಆಘಾತಕಾರಿ ಘಟನೆ ಪಿಂಪ್ರಿ ಚಿಂಚ್ವಾಡ್ನ ಬೋಸರಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ 7 ಗಂಟೆಗೆ ಈ ದುರ್ಘಟನೆ ನಡೆದಿದ್ದು, ಅನೇಕ ಮಂದಿ ಅವಶೇಷಗಳ ಅಡಿ ಸಿಲುಕಿದ್ದಾರೆ.
ಈ ಕುಸಿತ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯ ಅವಶೇಷಗಳ ಅಡಿಯಲ್ಲಿ ಸಿಲುಕಿದವರ ರಕ್ಷಣೆ ಮಾಡಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳಪೆ ಕಾಮಗಾರಿಯಿಂದಾಗಿ ಈ ಅನಾಹುತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕಾರ್ಮಿಕರ ಕ್ಯಾಂಪ್ ಬಳಿ ನಿರ್ಮಾಣ ವಾಗಿರುವ ಕುಸಿತಗೊಂಡ ನೀರಿನ ಟ್ಯಾಂಕ್ ಮುನ್ಸಿಪಲ್ ಕಾರ್ಪೊರೇಷನ್ಗೆ ಸಂಬಂಧಿಸಿದ್ದಲ್ಲ ಎಂದು ಆಯುಕ್ತರಾದ ಶೇಖರ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಇದೀಗ ಈ ವಾಟರ್ ಟ್ಯಾಂಕ್ ನಿರ್ಮಾಣ ಮಾಡಿದವರು ಯಾರು ಎಂಬ ಪ್ರಶ್ನೆ ಎದ್ದಿದ್ದು, ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಇನ್ನು ಈ ನಡುವೆ ಈ ಅನಾಹುತದಿಂದ ಮೃತರಾದ ಕುಟುಂಬಸ್ಥರು ಈ ಸಾವಿಗೆ ನ್ಯಾಯ ದೊರೆಯುವವರೆಗೂ ಮೃತ ದೇಹಗಳನ್ನು ನಾವು ಪಡೆದು ಕೊಳ್ಳುವುದಿಲ್ಲ ಎಂದು ಧರಣಿಗೆ ಮುಂದಾಗಿದ್ದಾರೆ. ಸಾರ್ವಜನಿಕರು ಮತ್ತು ಮೃತರ ಕುಟುಂಬಸ್ಥರು ಪ್ರತಿಭಟನೆ ಮಾಡುತ್ತಿರುವುದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ: ರಾಜಸ್ಥಾನ ಉಪ ಚುನಾವಣೆಗೆ ಕೈ ಅಭ್ಯರ್ಥಿ ಪಟ್ಟಿ ಪ್ರಕಟ: ಉ.ಪ್ರದೇಶದಲ್ಲಿ ಸೈಕಲ್ ಚಿಹ್ನೆಯಡಿ ಮೈತ್ರಿ ಅಭ್ಯರ್ಥಿಗಳು ಸ್ಪರ್ಧೆ