ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಪ್ರತಿಭೆಗಳು ಆಗಮಿಸಿ ಯಶಸ್ಸು ಕಾಣುತ್ತಿದ್ದಾರೆ. ಇದೀಗ 'ಕಲ್ಜಿಗ' ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದೆ. ಶೀರ್ಷಿಕೆಯಲ್ಲೇ ಕೌತುಕ ಮೂಡಿಸಿರೋ ಈ ಚಿತ್ರದ ಪೋಸ್ಟರ್ ಅನಾವಣಗೊಳಿಸಲಾಗಿದೆ. ನಾದಬ್ರಹ್ಮ ಹಂಸಲೇಖ ಸಮ್ಮುಖದಲ್ಲಿ ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಬಿಡುಗಡೆಗೊಂಡಿದೆ.

ನಿರ್ದೇಶಕ ಸುಮನ್ ಸುವರ್ಣ ಮಾತನಾಡಿ, ವಿಶೇಷ ಎಂದರೆ ಬಹು ಕಾಲದ ನಂತರ ನಾದಬ್ರಹ್ಮ ಹಂಸಲೇಖ ಈ ಸಿನಿಮಾ ಮೂಲಕ ಸಂಗೀತ ನಿರ್ದೇಶನಕ್ಕೆ ಮರಳಿದ್ದಾರೆ. ಗೀತರಚನೆಯತ್ತಲೂ ಹೊರಳಿಕೊಂಡಿದ್ದಾರೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಖುದ್ದು ಹಂಸಲೇಖ ಅವರೇ ಹಾಜರಿದ್ದಾರೆ. ನಲವತ್ತಕ್ಕೂ ಹೆಚ್ಚು ಸಿನಿಮಾಗಳ ಆಫರರ್ಗಳನ್ನು ತಿರಸ್ಕರಿಸಿ, ಕಲ್ಜಿಗ ಚಿತ್ರದತ್ತ ಆಕರ್ಷಿತರಾಗಿರುವುದಕ್ಕೆ ಕಾರಣಗಳನ್ನು ನಿರ್ದೇಶಕರು ಬಿಚ್ಚಿಟ್ಟರು. ಈ ಸಂದರ್ಭದಲ್ಲಿ ಚಿತ್ರತಂಡವನ್ನು ಮೆಚ್ಚಿಕೊಳ್ಳುತ್ತಲೇ ಒಂದಷ್ಟು ವಿಚಾರಗಳನ್ನು ನಿರ್ದೇಶಕರು ಹಂಚಿಕೊಂಡರು.

ಇನ್ನುಳಿದಂತೆ, ಗಿರ್ ಗಿಟ್, ಸರ್ಕಸ್, ಗಮ್ಜಾಲ್ ಸೇರಿದಂತೆ ಮುಂತಾದ ಚಿತ್ರಗಳ ನಿರ್ದೇಶನ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ ಸುಮನ್ ಸುವರ್ಣ 'ಕಲ್ಜಿಗ' ಮೂಲಕ ಸ್ವತಂತ್ರ್ಯ ನಿರ್ದೇಶಕರಾಗಿದ್ದಾರೆ. ತುಳು ಚಿತ್ರರಂಗದಲ್ಲಿ ಕಿಂಗ್ ಆಫ್ ಆ್ಯಕ್ಷನ್ ಎಂಬ ಬಿರುದಾಂಕಿತರಾಗಿರುವ ಅರ್ಜುನ್ ಕಾಪಿಕಾಡ್ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಅಪ್ಪಟ ಕನ್ನಡತಿ ಸುಶ್ಮಿತಾ ಭಟ್ ನಾಯಕಿಯಾಗಿ ಜೊತೆಯಾಗಿದ್ದಾರೆ. ಎಸ್.ಕೆ ಗ್ರೂಪ್ ಎಂಬ ಮಾರ್ಕೆಟಿಂಗ್ ಸಂಸ್ಥೆಯ ಮಾಲೀಕರಾಗಿರುವ ಶರತ್ ಕುಮಾರ್ ಎ.ಕೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಇದನ್ನೂ ಓದಿ: ನಾವು 'ಬ್ಯಾಡ್ ಬಾಯ್ಸ್' ಅಂತಿದೆ ವಿದ್ಯಾರ್ಥಿ ವಿದ್ಯಾರ್ಥಿನಿಯರ ತಂಡ - Vidyarthi Vidyarthiniyare
ಸದ್ಯದ ಮಟ್ಟಿಗೆ ಕಲ್ಜಿಗದ ಆಂತರ್ಯವನ್ನು ಚಿತ್ರತಂಡ ಗೌಪ್ಯವಾಗಿಟ್ಟಿದೆ. ಈಗಾಗಲೇ ಉಡುಪಿ, ಮಂಗಳೂರು ಸುತ್ತಮುತ್ತಲ ಪ್ರದೇಶಗಳಲ್ಲಿ ದೃಶ್ಯಗಳನ್ನು ಸೆರೆಹಿಡಿಯಲಾಗಿದ್ದು, ಚಿತ್ರೀಕರಣ ಮುಕ್ತಾಯವಾಗಿದೆ. ಇದೀಗ ಮುಕ್ಕಾಲು ಭಾಗ ಪೋಸ್ಟ್ ಪ್ರೊಡಕ್ಷನ್ ಕಾರ್ಯವೂ ಸಮಾಪ್ತಿಗೊಂಡಿದೆ. ಮಂಗಳೂರು ಸೀಮೆಯ ಕನ್ನಡ ಭಾಷಾ ಶೈಲಿಯಲ್ಲಿ ತಯಾರಾಗಿರುವ ಈ ಚಿತ್ರವನ್ನು ತುಳು ಭಾಷೆಗೂ ಡಬ್ ಮಾಡಲಾಗಿದೆಯಂತೆ. ಧರ್ಮದ ದಾರಿಯಲ್ಲಿ ಅಧರ್ಮದ ನೆರಳು ಬಿದ್ದ ನಂತರ ಘಟಿಸುವ ರೋಚಕ ಕಥನ 'ಕಲ್ಜಿಗ'ದಲ್ಲಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: 'ರಾಮಾಯಣ'ಕ್ಕಾಗಿ ರಣ್ಬೀರ್ ಸಿದ್ಧತೆ: ದೇಹ ದಂಡಿಸಿದ ಕಪೂರ್; ರೂಪಾಂತರದ ಫೋಟೋಗಳಿಲ್ಲಿವೆ - Ranbir Kapoor
ಛಾಯಾಗ್ರಾಹಕ ಸಚಿನ್ ಶೆಟ್ಟಿ, ಕುಲದಲ್ಲಿ ಕೀಳ್ಯಾವುದೋ ಸಿನಿಮಾ ನಿರ್ಮಾಪಕ ಸಂತೋಷ್ ಕುಮಾರ್, ನಿವೃತ್ತ ಪೊಲೀಸ್ ಅಧಿಕಾರಿ ಶಿವಪ್ರಕಾಶ್ ಮತ್ತು ಚಿತ್ರತಂಡ ಉಪಸ್ಥಿತವಿತ್ತು. ಹಂಸಲೇಖ ಸಂಗೀತ, ಸಾಹಿತ್ಯ, ಸಚಿನ್ ಶೆಟ್ಟಿ ಛಾಯಾಗ್ರಹಣ, ಪ್ರಸಾದ್ ಕೆ ಶೆಟ್ಟಿ ಹಿನ್ನೆಲೆ ಸಂಗೀತ, ಯಶ್ವಿನ್ ಕೆ ಶೆಟ್ಟಿಗಾರ್ ಅವರ ಸಂಕಲನ ಈ ಚಿತ್ರಕ್ಕಿದೆ. ಕಾಂತಾರ ಖ್ಯಾತಿಯ ಸನೀಲ್ ಗುರು ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ರಾಧಾಕೃಷ್ಣ ಮಾಣಿಲ, ಪ್ರೊಡಕ್ಷನ್ ಮ್ಯಾನೇಜರ್ ಆಗಿ ಸಂದೀಪ್ ಶೆಟ್ಟಿ ಕಲ್ಜಿಗಕ್ಕೆ ಕೈ ಜೋಡಿಸಿದ್ದಾರೆ. ಹಿಮಾನಿ ಫಿಲಂಸ್ ಬ್ಯಾನರ್ನಡಿಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ. ಸದ್ಯ ಶೂಟಿಂಗ್ ಮುಗಿಸಿರೋ ಕಲ್ಜಿಗ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ.