ಸಾಹಸ ನಿರ್ದೇಶಕರಾಗಿ ಪ್ರಸಿದ್ಧರಾಗಿರುವ ಕನ್ನಡದ ಡಾ. ಕೆ.ರವಿವರ್ಮ ನಿರ್ಮಾಣದ ಚಿತ್ರದಲ್ಲಿ ಜನಪ್ರಿಯ ನಟ ರಾಜ್ ಬಿ ಶೆಟ್ಟಿ ಬಣ್ಣ ಹಚ್ಚುತ್ತಿದ್ದಾರೆ. 'ರಕ್ಕಸಪುರದೋಳ್' ಎಂಬ ವಿಭಿನ್ನ ಶೀರ್ಷಿಕೆಯ ಮೂಲಕ ಚಿತ್ರ ಗಮನ ಸೆಳೆಯುತ್ತಿದೆ. ಇತ್ತೀಚೆಗೆ ಸಿನಿಮಾದ ಮುಹೂರ್ತ ಸಮಾರಂಭ ನೆಟಕಲ್ಲಪ್ಪ ಸರ್ಕಲ್ನಲ್ಲಿರುವ ವರಸಿದ್ಧಿವಿನಾಯಕ ದೇವಸ್ಥಾನದಲ್ಲಿ ಅದ್ಧೂರಿಯಾಗಿ ನೆರವೇರಿತು. ನಟಿ ರಕ್ಷಿತಾ ಹಾಗೂ ನಿರ್ದೇಶಕ ಪ್ರೇಮ್ ದಂಪತಿ ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿದರು. ಜೊತೆಗೆ ಶೀರ್ಷಿಕೆ ಅನಾವರಣಗೊಳಿಸುವ ಮೂಲಕ ಚಿತ್ರಕ್ಕೆ ತಮ್ಮ ಬೆಂಬಲ ಸೂಚಿಸಿದರು.
![Rakkasapuradhol muhurat event](https://etvbharatimages.akamaized.net/etvbharat/prod-images/17-08-2024/22228530_dngfhf.jpg)
ಮುಹೂರ್ತ ಸಮಾರಂಭದಲ್ಲಿ ಕೆ.ವಿ.ಎನ್ ಸಂಸ್ಥೆಯ ಸುಪ್ರೀತ್ ಉಪಸ್ಥಿತರಿದ್ದರು. 'ರಕ್ಕಸಪುರದೋಳ್' ರವಿ ಸಾರಂಗ ನಿರ್ದೇಶನದ ಚೊಚ್ಚಲ ಚಿತ್ರವಾಗಿದ್ದು, ಈವರೆಗೆ ತಮ್ಮ ಅಮೋಘ ಅಭಿನಯದ ಮೂಲಕ ಖ್ಯಾತರಾಗಿರುವ ರಾಜ್ ಬಿ ಶೆಟ್ಟಿ ನಾಯಕ ನಟನಾಗಿ ಕಾಣಿಸಿಕೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ರಕ್ಷಿತಾ ಪ್ರೇಮ್ ದಂಪತಿ, ಸಾಹಸ ನಿರ್ದೇಶಕರಾಗಿ ಜನಪ್ರಿರಾಗಿರುವ ರವಿವರ್ಮ ಅವರು ಈ ಚಿತ್ರದ ಮೂಲಕ ನಿರ್ಮಾಪಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ದಿ ವಿಲನ್, ಏಕ್ ಲವ್ ಯಾ, ಕೆ.ಡಿ ಸೇರಿದಂತೆ ಮೊದಲಾದ ಚಿತ್ರಗಳಿಗೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿದ್ದ ರವಿ ಸಾರಂಗ ಅವರು ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಜನಪ್ರಿಯ ನಟ ರಾಜ್ ಬಿ ಶೆಟ್ಟಿ ನಾಯಕನ ಪಾತ್ರಕ್ಕೆ ಜೀವ ತುಂಬುತ್ತಿದ್ದಾರೆ. 'ರಕ್ಕಸಪುರದೋಳ್' ಚಂದನವನದಲ್ಲಿ ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸಿದರು.
![Rakkasapuradhol muhurat event](https://etvbharatimages.akamaized.net/etvbharat/prod-images/17-08-2024/22228530_sdfdeghfg.jpg)
ನಂತರ ನಟ ರಾಜ್ ಬಿ ಶೆಟ್ಟಿ ಮಾತನಾಡಿ, ರಕ್ಕಸಪುರದೋಳ್ ಚಿತ್ರದ ಕಥೆ ಬಹಳ ಚೆನ್ನಾಗಿದೆ. ಜನರನ್ನು ಚಿತ್ರಮಂದಿರಕ್ಕೆ ಕರೆತರಲು ಬೇಕಾಗಿರುವಂತಹ ಕಥೆಯನ್ನು ನಿರ್ದೇಶಕ ರವಿ ರೆಡಿ ಮಾಡಿಕೊಂಡಿದ್ದಾರೆ. ನಾನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ. ಹಿಂದಿನ ಚಿತ್ರಗಳಿಗಿಂತ ಭಿನ್ನ ಪಾತ್ರ ಇದರಲ್ಲಿದೆ ಎಂದು ತಿಳಿಸಿದರು.
![Rakkasapuradhol muhurat event](https://etvbharatimages.akamaized.net/etvbharat/prod-images/17-08-2024/22228530_newsss.jpg)
ನಿರ್ದೇಶಕ ರವಿ ಸಾರಂಗ ಮಾತನಾಡಿ, ಕಳೆದ 10 ವರ್ಷಗಳಿಂದ ಪ್ರೇಮ್ ಸರ್ ಬಳಿ ಕಥೆ, ಚಿತ್ರಕಥೆ ಹಾಗೂ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಅವರ ಸಹಕಾರ ನನಗೆ ಎಂದಿಗೂ ಇರುತ್ತದೆ. ಪ್ರೇಮ್ ಮತ್ತು ರಕ್ಷಿತಾ ಅವರಿಗೆ ಧನ್ಯವಾದಗಳು. "ರಕ್ಕಸ" ಎಂದರೆ ರಾಕ್ಷಸ. "ಪುರ" ಎಂದರೆ ಊರು. ರಾಕ್ಷಸರೇ ಇರುವ ಊರು ಎಂಬುದು ಈ ಶೀರ್ಷಿಕೆಯ ಅರ್ಥ. ಮನುಷ್ಯನಲ್ಲಿ ಎರಡು ಗುಣಗಳಿರುತ್ತವೆ. ಒಂದು ಒಳ್ಳೆಯದು. ಮತ್ತೊಂದು ಕೆಟ್ಟದ್ದು. ಆ ಕೆಟ್ಟ ಗುಣಗಳನ್ನು "ರಕ್ಕಸ" ಎನ್ನಬಹುದು. ನಿರ್ಮಾಪಕ ರವಿವರ್ಮ ಹಾಗೂ ನಾಯಕ ರಾಜ್ ಬಿ ಶೆಟ್ಟಿ ಅವರು ಕಥೆ ಮೆಚ್ಚಿಕೊಂಡದ್ದು ಸಂತೋಷವಾಗಿದೆ ಎಂದರು.
ರವಿ ಸಾರಂಗ ಅವರು ನನಗೆ ಎರಡು ವರ್ಷಗಳಿಂದ ಪರಿಚಯ ಎಂದು ಮಾತು ಆರಂಭಿಸಿದ ನಿರ್ಮಾಪಕ ಕೆ.ರವಿವರ್ಮ, ಸಾಹಸ ನಿರ್ದೇಶಕನಾಗಿ ನನಗೆ ಎಲ್ಲರೂ ಪ್ರೋತ್ಸಾಹ ನೀಡಿದ್ದೀರಿ. ನಿರ್ಮಾಪಕನಾಗಿ ಇದು ಮೊದಲ ಹೆಜ್ಜೆ. ರವಿ ಸಾರಂಗ ಒಳ್ಳೆಯ ಕಥೆ ಮಾಡಿದ್ದಾರೆ. ರಾಜ್ ಬಿ ಶೆಟ್ಟಿ ಆ ಕಥೆಯನ್ನು ಒಪ್ಪಿ ನಟಿಸುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವಿಲಿಯಂ ಡೇವಿಡ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ, ನರಸಿಂಹ ಜಾಲಹಳ್ಳಿ ಅವರ ನಿರ್ಮಾಣ ನಿರ್ವಹಣೆಯಿರುವ "ರಕ್ಕಸಪುರದೋಳ್" ಚಿತ್ರಕ್ಕೆ ಕ್ರಾಂತಿ ಕುಮಾರ್ ಸಂಭಾಷಣೆ ಬರೆಯತ್ತಿದ್ದಾರೆ ಎಂದರು.
ಇದನ್ನೂ ಓದಿ: 'ಪೌಡರ್' ಹಬ್ಬದಲ್ಲಿ ಭಾಗಿಯಾದ ದುನಿಯಾ ವಿಜಯ್, ಶ್ರೀಮುರಳಿ: ಫೋಟೋಗಳಿಲ್ಲಿವೆ - Powder Habba
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮಾತನಾಡಿ, ರವಿವರ್ಮ ಅವರು ಸಾಹಸ ನಿರ್ದೇಶಕರಾಗಿ ನನ್ನ ನಿರ್ದೇಶನದ ಚಿತ್ರದಲ್ಲೂ ಕಾರ್ಯ ನಿರ್ವಹಿಸಿದ್ದಾರೆ. ಈ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ. ರಾಜ್ ಬಿ ಶೆಟ್ಟಿ ಅವರ ನಟನೆಯನ್ನು ಹತ್ತಿರದಿಂದ ನೋಡಿದ್ದೇನೆ. ಅವರೊಬ್ಬ ಉತ್ತಮ ಕಲಾವಿದ. ಇನ್ನು ರವಿ ಸಾರಂಗ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಒಟ್ಟಿನಲ್ಲಿ ಇದು ಕನ್ನಡದ "ಆರ್ ಆರ್ ಆರ್" ಚಿತ್ರ. ತ್ರಿಬಲ್ ಆರ್ ತರಹ ಈ ಚಿತ್ರ ಕೂಡ ಯಶಸ್ವಿಯಾಗಲಿ ಎಂದು ಹಾರೈಸಿದರು.
ರಾಜ್ ಬಿ ಶೆಟ್ಟಿ ಜೊತೆ ನಾಯಕಿಯಾಗಿ ಸ್ವಾತಿಷ್ಟ ಕಾಣಿಸಿಕೊಳ್ಳಲಿದ್ದಾರೆ. ಇವರ ಜೊತೆ ಬಿ.ಸುರೇಶ್, ಅರ್ಚನಾ ಕೊಟ್ಟಿಗೆ, ಗೌರವ್ ಶೆಟ್ಟಿ, ಸಿದ್ದಣ್ಣ, ಸುಮ, ಅನಿರುದ್ದ್ ಭಟ್ ಸೇರಿದಂತೆ ಮುಂತಾದವರು ಅಭಿನಯಿಸಲಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ.