ಈ ತಿಂಗಳು 22ನೇ ತಾರೀಖಿನಿಂದ ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟಿ20 ಸರಣಿ ಪ್ರಾರಂಭವಾಗಲಿದೆ. ಇದು ಮುಗಿದ ಬೆನ್ನಲ್ಲೆ ಫೆ.6 ರಿಂದ 3 ಪಂದ್ಯಗಳ ಏಕದಿನ ಸರಣಿ ಪ್ರಾರಂಭವಾಗಲಿದೆ. ಏತನ್ಮಧ್ಯೆ, ಚಾಂಪಿಯನ್ಸ್ ಟ್ರೋಫಿ ಮತ್ತು ಇಂಗ್ಲೆಂಡ್ ವಿರುದ್ದದ ಏಕದಿನ ಸರಣಿಗಾಗಿ ಶನಿವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 15 ಸದಸ್ಯರ ಬಲಿಷ್ಟ ತಂಡವನ್ನು ಪ್ರಕಟಿಸಿದೆ.
ಟೀಂ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ನಾಯಕ ರೋಹಿತ್ ಶರ್ಮಾ ಜಂಟಿ ಸುದ್ಧಿಗೋಷ್ಠಿ ನಡೆಸಿ ತಂಡವನ್ನು ಪ್ರಕಟಿಸಿದ್ದಾರೆ. ಬರೋಬ್ಬರಿ ಒಂದು ವರ್ಷದ ಬಳಿಕ ಮೊಹಮ್ಮದ್ ಶಮಿ ಅಂತಾರಾಷ್ಟ್ರೀಯ ಪಂದ್ಯಕ್ಕೆ ಕಮ್ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಜೊತೆಗೆ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಕೂಡ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದು, ಇದು ಅವರ ಚೊಚ್ಚಲ ಏಕದಿನ ಸರಣಿ ಆಗಲಿದೆ. ಆದರೆ ಇಂಗ್ಲೆಂಡ್ ವಿರುದ್ಧ ಟಿ20 ಮತ್ತು ಏಕದಿನ ಸರಣಿ ಎರಡರಿಂದಲೂ ವೇಗಿ ಜಸ್ಪ್ರೀತ್ ಬುಮ್ರಾ ಹೊರಗುಳಿಯಲಿದ್ದಾರೆ.
ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಐದು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಭಾಗವಾಗಿದ್ದ ಟೀಂ ಇಂಡಿಯಾದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಸರಣಿ ಉದ್ದಕ್ಕೂ ಭರ್ಜರಿ ಪ್ರದರ್ಶನ ತೋರಿದ್ದರು. ಎಲ್ಲ 5 ಪಂದ್ಯಗಳಲ್ಲಿ ಕಾಂಗರೂ ಪಡೆ ಕಾಡಿದ್ದ ಬುಮ್ರಾ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡದ ಬೌಲರ್ ಎನಿಸಿಕೊಂಡರು.
ಆದರೆ, ಸರಣಿಯ 5ನೇ ಮತ್ತು ಅಂತಿಮ ಪಂದ್ಯದಲ್ಲಿ ಬೆನ್ನು ನೋವಿಗೆ ತುತ್ತಾದ ಬುಮ್ರಾ ಪಂದ್ಯದ ನಡುವೆಯೇ ಆಸ್ಪತ್ರೆಗೆ ತೆರಳಿದ್ದರು. ಇದಾದ ಬಳಿಕ ಎರಡನೇ ಇನ್ನಿಂಗ್ಸ್ನಲ್ಲಿ ಅವರಿಗೆ ಬೌಲಿಂಗ್ ಮಾಡಲು ಸಾಧ್ಯವಾಗಿರಲಿಲ್ಲ. ಸದ್ಯ ಅವರು ಗಾಯದಿಂದ ಚೇತರಿಸಿಕೊಂಡಿದ್ದರು ಮುಂದಿನ ತಿಂಗಳು ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ದೃಷ್ಟಿಯಿಂದ ತಂಡದಿಂದ ಹೊರಗಿಡಲಾಗಿದೆ.
ಏತನ್ಮಧ್ಯೆ ಇವರ ಸ್ಥಾನಕ್ಕೆ ಯುವ ವೇಗಿ ಹರ್ಷಿತ್ ರಾಣಾ ಅವರಿಗೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿರುವ ಹರ್ಷಿತ್ ರಾಣಾ, ಬುಮ್ರಾ ಅವರ ಬದಲಿ ಆಟಗಾರನಾಗಿ ಆಯ್ಕೆ ಆಗಿದ್ದು ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದರೇ ಇದು ಅವರ ಚೊಚ್ಚಲ ಏಕದಿನ ಸರಣಿ ಆಗಲಿದೆ.
ಒಂದು ವೇಳೆ, ಈ ಸರಣಿಯಲ್ಲಿ ಉತ್ತಮ ಪರ್ಫಾಮೆನ್ಸ್ ತೋರಿದರೇ, ಬುಮ್ರಾ ಫಿಟ್ನೆಸ್ ಕಾರಣದಿಂದ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದರೇ ಇಲ್ಲಿಯೂ ಆಯ್ಕೆಯಾಗುವ ಸಾಧ್ಯತೆ ಇದೆ.
ಏಕದಿನ ವೇಳಾಪಟ್ಟಿ: ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯ ಫೆಬ್ರವರಿ 6ಕ್ಕೆ ನಡೆಯಲಿದೆ. ಎರಡನೇ ಪಂದ್ಯ ಫೆಬ್ರವರಿ 9, ಮೂರನೇ ಮತ್ತು ಅಂತಿಮ ಪಂದ್ಯ ಫೆಬ್ರವರಿ 12 ರಂದು ನಡೆಯಲಿದೆ.
ಇಂಗ್ಲೆಂಡ್ ಏಕದಿನ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.
ಇದನ್ನೂ ಓದಿ: ಸಾರಿ ಸಿರಾಜ್.. ಇದೇ ಕಾರಣಕ್ಕೆ ನಿನ್ನ ಚಾಂಪಿಯನ್ ಟ್ರೋಫಿಗೆ ಆಯ್ಕೆ ಮಾಡಲಿಲ್ಲ: ರೋಹಿತ್ ಶರ್ಮಾ!