ICC Champion Trophy 2025: ಬಹು ನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಮುಂದಿನ ವಾರದಿಂದ ಪ್ರಾರಂಭವಾಗಲಿದೆ. 7 ವರ್ಷಗಳ ಬಳಿಕ ನಡೆಯುತ್ತಿರುವ ಈ ಟೂರ್ನಿಯ ಪಂದ್ಯಾವಳಿಗಳು ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿವೆ.
ಈಗಾಗಲೇ ಎರಡು ಭಾರಿ (2002 ಮತ್ತು 2013)ರಲ್ಲಿ ಗೆಲುವು ಸಾಧಿಸಿದೆ. ಇದೀಗ ಮೂರನೇ ಬಾರಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಚಾಂಪಿಯನ್ ಆಗಲು ಬಯಸಿದೆ. ಆದರೆ ಪಂದ್ಯಾವಳಿ ಆಂರಂಭಕ್ಕೂ ಮೊದಲೇ ಭಾರತಕ್ಕೆ ಆಘಾತ ಎದುರಾಗಿದೆ.
ಜಸ್ಪ್ರೀತ್ ಬುಮ್ರಾ ಔಟ್: ಹೌದು, ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಪಡೆದಿದ್ದ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಆರಂಭಿಕ ಬ್ಯಾಟರ್ ಜೈಸ್ವಾಲ್ ಇಬ್ಬರು ಈ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಬುಮ್ರಾ ಇತ್ತೀಚೆಗೆ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ 150ಕ್ಕೂ ಹೆಚ್ಚು ಓವರ್ ಬೌಲ್ ಮಾಡಿ ಬೆನ್ನು ನೋವಿಗೆ ತುತ್ತಾಗಿದ್ದರು. ಇದರಿಂದಾಗಿ 5ನೇ ಪಂದ್ಯದಲ್ಲಿ ಅರ್ಧಕ್ಕೆ ಮೈದಾನ ತೊರೆದಿದ್ದ ಅವರು ಬಳಿಕ ಬೌಲಿಂಗ್ ಮಾಡಲು ಸಾಧ್ಯವಾಗಿರಲಿಲ್ಲ. ಬೆನ್ನು ನೋವಿನಿಂದ ಬಳಲುತ್ತಿರುವ ಬುಮ್ರಾ ಇನ್ನೂ ಚೇತರಿಸಿಕೊಂಡಿಲ್ಲ. ಈ ಹಿನ್ನೆಲೆ ಚಾಂಪಿಯನ್ಸ್ ಟ್ರೋಫಿಯ ಅಂತಿಮ ತಂಡದಿಂದ ಹೊರ ಬಿದ್ದಿದ್ದಾರೆ.
ಹೊರಬಿದ್ದ ಜೈಸ್ವಾಲ್: ತಂಡದಲ್ಲಿ ಸ್ಥಾನ ಪಡೆದಿದ್ದ ಜೈಸ್ವಾಲ್ ಅವರನ್ನೂ ಕೈಬಿಡಲಾಗಿದ್ದು, ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಕನ್ನಡಿಗನಿಗೆ ಅವಕಾಶ ನೀಡಲಾಗಿದೆ.
ಬುಮ್ರಾ ಸ್ಥಾನಕ್ಕೆ ರಾಣಾ: ಬುಮ್ರಾ ಚಾಂಪಿಯನ್ಸ್ ಟ್ರೋಫಿಯಿಂದ ಹೊರ ಬೀಳುತ್ತಿದ್ದಂತೆ ಅವರ ಸ್ಥಾನಕ್ಕೆ ಯುವ ವೇಗಿ ಹರ್ಷಿತ್ ರಾಣಾ ಅವರಿಗೆ ಅವಕಾಶ ನೀಡಲಾಗಿದೆ. ಇಂಗ್ಲೆಂಡ್ ವಿರುದ್ದ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ರಾಣಾ ಏಕದಿನಕ್ಕೆ ಪದಾರ್ಪಣೆ ಮಾಡಿದ್ದಾರೆ.
ಜೈಸ್ವಾಲ್ ಸ್ಥಾನಕ್ಕೆ ಚಕ್ರವರ್ತಿ: ಜೈಸ್ವಾಲ್ ಅವರನ್ನು ಅಂತಿಮ ತಂಡದಿಂದ ಕೈಬಿಡಲಾಗಿದ್ದು, ಅವರ ಸ್ಥಾನಕ್ಕೆ ಕನ್ನಡಿಗ ವರುಣ್ ಚಕ್ರವರ್ತಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಭಾರತದ ಪಂದ್ಯಗಳು: ಭಾರತ ಫೆ.20 ರಂದು ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದ್ದು, ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ. ಎರಡನೇ ಪಂದ್ಯದಲ್ಲಿ ಫೆ.23 ರಂದು ಪಾಕಿಸ್ತಾನ ವಿರುದ್ಧ ಸೆಣಸಲಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತದ ಅಂತಿಮ ತಂಡ
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭಮನ್ ಗಿಲ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.
ಇದನ್ನೂ ಓದಿ: ಇಂದು IND vs ENG 3ನೇ ಏಕದಿನ ಪಂದ್ಯ; ಇದನ್ನು ಮೊಬೈಲ್ನಲ್ಲಿ ಉಚಿತವಾಗಿ ನೋಡುವುದು ಹೇಗೆ?