ಬೆಂಗಳೂರು: ರಾಜ್ಯದಲ್ಲಿ ಲೋಕಸಮರ ಅಖಾಡ ರಂಗೇರಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಮೊದಲ ಹಂತದ 14 ಲೋಕಸಭೆ ಕ್ಷೇತ್ರಗಳಲ್ಲಿ ಮೈತ್ರಿ ಜೆಡಿಎಸ್-ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಅಖಾಡದಲ್ಲಿರುವ ಪ್ರಮುಖ ಅಭ್ಯರ್ಥಿಗಳ ಮೇಲಿರುವ ಪ್ರಕರಣಗಳೆಷ್ಟು ಎಂಬ ವರದಿ ಇಲ್ಲಿದೆ.
ಏ.26ಕ್ಕೆ ರಾಜ್ಯದಲ್ಲಿ ಮೊದಲ ಹಂತದ ಲೋಕಸಮರ ಚುನಾವಣೆ ನಡೆಯಲಿದೆ. 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮಾ.28ರಿಂದ ಆರಂಭವಾಗಿ ಏ.4ರ ವರೆಗೆ ನಡೆದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಒಟ್ಟು 358 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಈ ಪೈಕಿ 333 ಪುರುಷರು ಹಾಗೂ 25 ಮಹಿಳೆಯರು ಉಮೇದುವಾರಿಕೆ ಸಲ್ಲಿಸಿದ್ದಾರೆ. ಇದರಲ್ಲಿ ಒಟ್ಟು 211 ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನೋಂದಾಯಿತ ಮಾನ್ಯತೆ ಪಡೆಯದ ವಿವಿಧ ಪಕ್ಷಗಳ ಒಟ್ಟು 161 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಏ.8ರಂದು ನಾಮಪತ್ರ ಹಿಪಡೆಯಲು ಕೊನೆಯ ದಿನವಾಗಿದೆ.
ಏ.26ರಂದು ರಾಜ್ಯದಲ್ಲಿ ಉಡುಪಿ - ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ (ಎಸ್ಸಿ) ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳು ಅಖಾಡದಲ್ಲಿ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ. ಕಣಕ್ಕಿಳಿದಿರುವ ಪ್ರಮುಖ ಅಭ್ಯರ್ಥಿಗಳ ವಿರುದ್ಧ ದಾಖಲಾಗಿರುವ ಅಪರಾಧ ಪ್ರಕರಣಗಳೇನು ಎಂಬ ವರದಿ ಇಲ್ಲಿದೆ.
1. ಬೆಂಗಳೂರು ಕೇಂದ್ರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಮೇಲೆ ಎರಡು ಪ್ರಕರಣಗಳಿವೆ. ಕಾನೂನುಬಾಹಿರವಾಗಿ ಗುಂಪುಗೂಡಿರುವುದು, ಸಾರ್ವಜನಿಕರಿಗೆ ಅಡಚಣೆ, ಪರವಾನಿಗೆ ಇಲ್ಲದೆ ಪ್ರತಿಭಟನೆಗೆ ಸಂಬಂಧಿಸಿದಂತೆ ಒಂದು ಎಫ್ಐಆರ್ ದಾಖಲಾಗಿದೆ. ಇನ್ನು 2014, 2019ರ ಚುನಾವಣೆ ವೇಳೆ ಸಲ್ಲಿಸಿದ ಆಸ್ತಿ ವಿವರದಲ್ಲಿ ಕೆಲ ಚರಾಸ್ತಿ ಮಾಹಿತಿ ಬಹಿರಂಗ ಪಡಿಸಿಲ್ಲ ಎಂದು ಖಾಸಗಿ ದೂರು ದಾಖಲಾಗಿದೆ. ಎರಡೂ ಪ್ರಕರಣಗಳ ಸಂಬಂಧ ತನಿಖೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ವಿರುದ್ಧ ಸಿಕಂದರಾಬಾದ್ನಲ್ಲಿ 1 ಪ್ರಕರಣ ದಾಖಲಾಗಿದೆ. ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿದ್ದರ ಸಂಬಂಧ ಪ್ರಕರಣ ದಾಖಲಾಗಿದೆ ಎಂಬ ಬಗ್ಗೆ ಅಫಿಡವಿಟ್ನಲ್ಲಿ ತಿಳಿಸಿದ್ದಾರೆ.
2. ಬೆಂಗಳೂರು ಉತ್ತರ ಕ್ಷೇತ್ರ: ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೀವ್ ಗೌಡ ವಿರುದ್ಧ ಯಾವುದೇ ಪ್ರಕರಣಗಳಿಲ್ಲ ಎಂದು ತಮ್ಮ ಅಫಿಡವಿಟ್ನಲ್ಲಿ ತಿಳಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ 4 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಇ.ಡಿ. ದಾಖಲಿಸಿರುವ ಪಿಎಂಎಲ್ಎ ಕಾಯ್ದೆ ಪ್ರಕರಣ. ಶೆಲ್ ಕಂಪನಿಯೊಂದರಲ್ಲಿ ಹಣ ಹೂಡಿಕೆ ಆರೋಪದಡಿ ಇ.ಡಿ. ಕರಂದ್ಲಾಜೆ ವಿರುದ್ಧ ಕೇಸ್ ದಾಖಲಿಸಿದೆ. ಉಳಿದಂತೆ ದ್ವೇಷ ಭಾಷಣ, ಬೇರೆ ರಾಜ್ಯದ ವಿರುದ್ಧ ದ್ವೇಷ ಭಾಷಣ, ಮಾನನಷ್ಟ ಪ್ರಕರಣ ಸೇರಿ ಒಟ್ಟು ನಾಲ್ಕು ಮೊಕದ್ದಮೆಗಳು ದಾಖಲಾಗಿವೆ.
3. ಬೆಂಗಳೂರು ಗ್ರಾಮಾಂತರ ಕ್ಷೇತ್ರ: ಇನ್ನು ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಡಾ.ಸಿ.ಎನ್. ಮಂಜುನಾಥ್ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ಇಲ್ಲ. ಇತ್ತ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಸಲ್ಲಿಸಿರುವ ಅಫಿಡವಿಟ್ನಲ್ಲಿ ತಮ್ಮ ವಿರುದ್ಧ 3 ಎಫ್ಐಆರ್ ದಾಖಲಾಗಿರುವುದಾಗಿ ಹೇಳಿಕೊಂಡಿದ್ದಾರೆ. ಈ ಮೂರು ಪ್ರಕರಣಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ, ಮೇಕೆದಾಟು ಪಾದಯಾತ್ರೆ ವೇಳೆ ಎರಡು ಪ್ರಕರಣಗಳು ಸೇರಿವೆ.
4. ಬೆಂಗಳೂರು ದಕ್ಷಿಣ ಕ್ಷೇತ್ರ: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ವಿರುದ್ಧ ಒಟ್ಟು 6 ಪ್ರಕರಣಗಳನ್ನು ಹೊಂದಿದ್ದಾರೆ. ಇದರಲ್ಲಿ ನಿಂದನೆ, ಪ್ರತಿಭಟನೆ, ಕರ್ತವ್ಯಕ್ಕೆ ಅಡ್ಡಿ, ಸಾರ್ಜಜನಿಕ ಆಸ್ತಿ ಹಾನಿಗೆ ಸಂಬಂಧಿಸಿ ಆರು ಪ್ರಕರಣಗಳು ಸೇರಿವೆ.
ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ 3 ಕೇಸ್ ಗಳು ಇವೆ. ಇದರಲ್ಲಿ ದ್ವೇಷ ಭಾಷಣ ಸಂಬಂಧ ಎರಡು ಪ್ರಕರಣ ಕರ್ನಾಟಕದಲ್ಲಿ ದಾಖಲಾಗಿದ್ದರೆ, ದಿಲ್ಲಿಯಲ್ಲಿ ಪ್ರತಿಭಟನೆ ಸಂಬಂಧ ಪ್ರಕರಣ ದಾಖಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ನೀಡಲಾಗಿದೆ ಎಂದು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ನಲ್ಲಿ ತಿಳಿಸಿದ್ದಾರೆ.