ಬೆಂಗಳೂರು: ''ಸುಳ್ಳು ಸುದ್ದಿಗಳನ್ನು ನಿಯಂತ್ರಿಸಲು ಇನ್ನೆರಡು ದಿನಗಳಲ್ಲಿ ಆದೇಶ ಹೊರಡಿಸಲಾಗುವುದು'' ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ನಡೆದ ಸಭೆ ಬಳಿಕ ಮಾತನಾಡಿದ ಅವರು, ''ಫೋಟೋ ಮತ್ತು ವಿಡಿಯೋಗಳನ್ನು ತಿರುಚಿ ಬಿತ್ತರಿಸುವುದು ಸೇರಿದಂತೆ ವಿವಿಧ ರೀತಿಯ ಸೈಬರ್ ಕ್ರೈಂ ನಡೆಯುತ್ತಿವೆ. ಇಂತಹ ಪ್ರಕರಣಗಳಿಗೆ ಯಾವ ರೀತಿ ಕ್ರಮ ತೆಗದುಕೊಳ್ಳಬೇಕು ಎಂಬುದರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಂಮತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸೈಬರ್ ಕ್ರೈಂ ವಿಷಯಗಳ ಕುರಿತ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇನ್ನೆರಡು ದಿನಗಳಲ್ಲಿ ಸರ್ಕಾರ ಆದೇಶ ಹೊರಡಿಸುತ್ತದೆ'' ಎಂದು ಮಾಹಿತಿ ನೀಡಿದರು.
''ಮಲ್ಟಿ ಡಿಪಾರ್ಟ್ಮೆಂಟ್ ಕೋರ್ಡಿನೇಷನ್ ಕಮಿಟಿಯನ್ನು ರಚಿಸಲಾಗಿದೆ. ಇದಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಮುಖ್ಯಸ್ಥರಾಗಿರುತ್ತಾರೆ. ನೋಡಲ್ ಅಧಿಕಾರಿಯನ್ನು ನೇಮಿಸಲಾಗುತ್ತದೆ. ನೋಡಲ್ ಅಧಿಕಾರಿಗೆ ಹೆಚ್ಚಿನ ಜವಾಬ್ದಾರಿಯನ್ನು ವಹಿಸಲಾಗುತ್ತಿದೆ. ಡಿಜಿ ಮತ್ತು ಐಜಿಪಿ ಮೂಲಕ ಸರ್ಕಾರಕ್ಕೆ ಮಾಹಿತಿ ಕೊಡುತ್ತಾರೆ'' ಎಂದು ವಿವರಿಸಿದರು.
ಲೋಕಸಭೆ ಚುನಾವಣೆ ಹಿನ್ನೆಲೆ ಪೌರತ್ವ ಕಾಯ್ದೆ ಜಾರಿ: ''ಲೋಕಸಭಾ ಚುನಾವಣಾ ದೃಷ್ಟಿಯಿಂದ ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದೆ'' ಎಂದು ಕಿಡಿಕಾರಿದರು. ''ಪೌರತ್ವ ತಿದ್ದುಪಡಿ ಕಾಯ್ದೆಗೆ ಬಹಳಷ್ಟು ಜನರು ವಿರೋಧ ವ್ಯಕ್ತಪಡಿಸಿರುವುದನ್ನು ನಾವೆಲ್ಲ ನೋಡಿದ್ದೇವೆ. ಇದರ ನಡುವೆಯೂ ಕೇಂದ್ರ ಸರ್ಕಾರ ಇಂತಹ ನಿರ್ಧಾರಕ್ಕೆ ಬಂದಿದೆ. ಚುನಾವಣೆ ದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಇದರಲ್ಲಿ ರಾಜಕೀಯ ಉದ್ದೇಶವಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ'' ಎಂದರು.
''ಬಿಜೆಪಿಯವರಿಗೆ ಎಲ್ಲೋ ಒಂದು ಕಡೇ ಸೋಲಿನ ಆತಂಕ ಕಾಡುತ್ತಿದೆ. ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತರಾದರೂ ಸೋಲಿನ ಭಯವಿದೆ. ಬಿಜೆಪಿಯವರಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ಕಡಿಮೆಯಾದಂತಿದೆ. ಅದಕ್ಕಾಗಿ ಇಂತಹ ತೀರ್ಮಾನ ತೆಗೆದುಕೊಂಡಿದ್ದಾರೆ'' ಎಂದು ಹೇಳಿದರು.
ವರದಿ ಆಧರಿಸಿ ಕ್ರಮ: ''ಮೆಣಸಿನಕಾಯಿ ದರ ಒಂದೇ ದಿನದಲ್ಲಿ 20 ಸಾವಿರ ರೂಪಾಯಿಯಿಂದ 8 ಸಾವಿರ ರೂಪಾಯಿಗೆ ಕುಸಿತವಾಗಿದೆ. ಇದರಿಂದ ಹಾವೇರಿ ಎಪಿಎಂಸಿ ಮಾರುಕಟ್ಟೆಯಲ್ಲಿ ಗಲಾಟೆಯಾಗಿದೆ ಎಂಬುದು ಗೊತ್ತಾಗಿದೆ. ಈ ರೀತಿಯ ದರ ಕುಸಿತ ಎಲ್ಲ ಎಪಿಎಂಸಿ ಮಾರುಕಟ್ಟೆಗಳಲ್ಲಿ ಆಗಿದೆಯಾ ಅಥವಾ ಹಾವೇರಿ ಮಾರುಕಟ್ಟೆಯಲ್ಲಿ ಮಾತ್ರ ಆಗಿದೆಯಾ ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದೆ. ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಲಾಗಿದೆ. ಒಂದೇ ದಿನದಲ್ಲಿ 12 ಸಾವಿರ ರೂ. ದರ ಕುಸಿಯಲು ಏನು ಕಾರಣವೇನು ಎಂಬುದನ್ನು ತಿಳಿಯಲು ವರದಿ ನೀಡುವಂತೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು'' ಎಂದು ತಿಳಿಸಿದರು.
ಇದನ್ನೂ ಓದಿ: ಬಹುತೇಕ ಕ್ಷೇತ್ರಗಳಲ್ಲಿ ಸಿಂಗಲ್ ನೇಮ್ ಇದೆ, ಅಂತಿಮ ನಿರ್ಧಾರ ಹೈಕಮಾಂಡ್ಗೆ ಬಿಟ್ಟಿದ್ದು: ಡಿಕೆಶಿ