ಮಂಗಳೂರು (ದಕ್ಷಿಣ ಕನ್ನಡ) : ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮೂರು ಶಾಲೆಗಳಿಗೆ ಇಂದು ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಶೋಧ ಕಾರ್ಯಾಚರಣೆ ವೇಳೆ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂದಿದೆ.
ನಗರದ ಅತ್ತಾವರದ ಮಣಿಪಾಲ್ ಶಾಲೆ (ಮಂಗಳೂರು ದಕ್ಷಿಣ ಪೊಲೀಸ್ ಠಾಣೆ), ಪ್ರೆಸಿಡೆನ್ಸಿ ಶಾಲೆ ಮತ್ತು ಪಿಯು ಕಾಲೇಜು ಮತ್ತು ನೀರುಮಾರ್ಗ ಬಳಿಯ ಕೇಂಬ್ರಿಡ್ಜ್ ಶಾಲೆ (ಮಂಗಳೂರು ಗ್ರಾಮೀಣ ಪೊಲೀಸ್ ಠಾಣೆ)ಗಳಿಗೆ ತಮ್ಮ ಆವರಣದಲ್ಲಿ ಐಇಡಿಗಳಿವೆ ಎಂದು ಬೆದರಿಕೆ ಇಮೇಲ್ಗಳು ಬಂದಿದ್ದವು.
ಬಾಂಬ್ ಬೆದರಿಕೆಯ ಇಮೇಲ್ ಬಂದ ಹಿನ್ನೆಲೆಯಲ್ಲಿ ಮಾಹಿತಿ ಪಡೆದ ತಕ್ಷಣವೇ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿತ್ತು ಮತ್ತು ನಗರದ ಎಎಸ್ಸಿ ತಪಾಸಣಾ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಮೂರು ಶಾಲೆಗಳಲ್ಲಿ ವಿಧ್ವಂಸಕ ಕೃತ್ಯಗಳ ವಿರುದ್ಧ ಸಂಪೂರ್ಣ ತಪಾಸಣೆ ನಡೆಸಿವೆ.
ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು, ಪರಿಶೀಲನೆಗಳು ಪೂರ್ಣಗೊಂಡಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡು ಬಂದಿಲ್ಲ. ಇದಲ್ಲದೇ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸುರಕ್ಷತೆ ಖಚಿತಪಡಿಸಿಕೊಳ್ಳಲು ಶಾಲೆಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಶಾಲಾ ಅಧಿಕಾರಿಗಳಿಗೆ ಜಾಗರೂಕರಾಗಿರಲು ಮತ್ತು ಯಾವುದೇ ಅನುಮಾನಾಸ್ಪದ ಚಲನವಲನ ಕಂಡರೆ ತಕ್ಷಣ ಪೊಲೀಸರಿಗೆ ವರದಿ ಮಾಡಲು ಸೂಚಿಸಲಾಗಿದೆ. ಈ ಬೆದರಿಕೆ ಇಮೇಲ್ಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಮತ್ತು ಈ ಇಮೇಲ್ಗಳ ಮೂಲದ ಬಗ್ಗೆ ವಿವರವಾದ ತನಿಖೆ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ ; ಶುಕ್ರವಾರದ ನಮಾಜ್ ಸಮಯ ನಿಗದಿಪಡಿಸಿದ್ದ ದರೋಡೆಕೋರರು - KOTEKAR BANK ROBBERY