ಚಾಮರಾಜನಗರ: ಶುದ್ಧ ಹಸ್ತರು, ಸ್ವಚ್ಛ ರಾಜಕಾರಣಿ, ಅಜಾತ ಶತ್ರು ಎಂದೇ ಜನಮನ್ನಣೆ ಗಳಿಸಿದ್ದ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉದ್ಘಾಟನೆ ಮಾಡಿದರು.
ಹಳೇ ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕರಾಗಿದ್ದ ಬಿ. ರಾಚಯ್ಯ ಅವರು ಸಿದ್ದರಾಮಯ್ಯ ರಾಜಕೀಯ ಏಳಿಗೆಗೆ ಕಾರಣರಾಗಿದ್ದರು. ತಮಗೆ ಶಕ್ತಿ ತುಂಬಿದ ಗುರುವಿಗೆ ಸಿದ್ದರಾಮಯ್ಯ ನಮಿಸಿದರು. ಅಂದಹಾಗೆ, ಬಿ.ರಾಚಯ್ಯ ಅವರ ಸ್ಮಾರಕಕ್ಕೆ ಮೊದಲ ಸಿಎಂ ಅವಧಿಯಲ್ಲಿ ಬಜೆಟ್ನಲ್ಲಿ ಅನುದಾನ ಘೋಷಣೆ ಮಾಡಿದ್ದರು.
ಚಾಮರಾಜನಗರ ತಾಲೂಕಿನ ಆಲೂರು ಗ್ರಾಮದ ಹೊರವಲಯದಲ್ಲಿ 1 ಹೆಕ್ಟೇರ್ 11 ಗುಂಟೆ ಜಾಗದಲ್ಲಿ ಭವ್ಯ ಸ್ಮಾರಕ ನಿರ್ಮಾಣ ಮಾಡಲಾಗಿದೆ. ನೆಲ ಮಹಡಿ ಹಾಗೂ ಮೊದಲ ಮಹಡಿ ಸೇರಿ 6,400 ಚದರ ಅಡಿ ವಿಸ್ತೀರ್ಣ ಹೊಂದಿರುವ ಸ್ಮಾರಕವು ಶ್ವೇತ ವರ್ಣದಲ್ಲಿ ಕಂಗೊಳಿಸುತ್ತಿದೆ. ರಾಚಯ್ಯ ಅವರ ವ್ಯಕ್ತಿತ್ವಕ್ಕೆ ಹೊಂದುವಂತೆ ಅರಳುವ ಕಮಲ ಶೈಲಿಯಲ್ಲಿ ಸ್ಮಾರಕ ರೂಪಿಸಿದ್ದು, ಇಡೀ ಸ್ಮಾರಕಕ್ಕೆ ರಾಜಸ್ಥಾನದ ಮಾರ್ಬಲ್ ಬಳಕೆ ಮಾಡಲಾಗಿದೆ.
4.87 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆದಿದ್ದು, ಬಿ. ರಾಚಯ್ಯ ಅವರ ಜೀವನ ಚರಿತ್ರೆ ಬಿಂಬಿಸುವ 120ಕ್ಕೂ ಹೆಚ್ಚು ಛಾಯಾಚಿತ್ರಗಳ ಗ್ಯಾಲರಿ ಸ್ಮಾರಕದಲ್ಲಿ ಪ್ರದರ್ಶಿಸಲಾಗುತ್ತಿದೆ. ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳು, ವಿವಿಧ ಇಲಾಖೆಗಳ ಸಚಿವರಾಗಿ ತೆಗೆದುಕೊಂಡ ಮಹತ್ವದ ನಿರ್ಧಾರಗಳ ಮಾಹಿತಿ ಲಭ್ಯವಾಗಲಿದೆ. ಇದರ ಜೊತೆಗೆ ರಾಚಯ್ಯ ಅವರು ಉಪಯೋಗಿಸುತ್ತಿದ್ದ ಕೋಟ್, ವಾಚ್, ವಾಕಿಂಗ್ ಸ್ಟಿಕ್, ವಿಸಿಟಿಂಗ್ ಕಾರ್ಡ್ ಹಾಗೂ ಸಾರ್ವಜನಿಕ ಜೀವನದಲ್ಲಿ ದೊರೆತ ಅಪರೂಪದ ಸ್ಮರಣಿಕೆಗಳು, ಪುಸ್ತಕಗಳು ಸ್ಮಾರಕದಲ್ಲಿ ವೀಕ್ಷಣೆಗೆ ಲಭ್ಯವಿದೆ.
ಜನ್ಮದಿನವೇ ಶಂಕುಸ್ಥಾಪನೆ, ಉದ್ಘಾಟನೆ: 2017, ಆ.10ರಂದು ರಾಚಯ್ಯ ಅವರ ಜನ್ಮದಿನವಾದಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗಲೂ ಕೂಡ ರಾಚಯ್ಯ ಅವರ ಜನ್ಮದಿನದಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮಾರಕ ಲೋಕಾರ್ಪಣೆ ಮಾಡಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ. ರಾಚಯ್ಯ ಅವರು ರಾಜ್ಯ ರಾಜಕಾರಣದ ಅತ್ಯಂತ ಮುತ್ಸದ್ಧಿ ರಾಜಕಾರಣಿ. ಹೆಚ್ಚು ಮಾತಾಡುತ್ತಿರಲಿಲ್ಲ. ಬಡವರ ಪರವಾಗಿ ಹೆಚ್ಚೆಚ್ಚು ಕೆಲಸ ಮಾಡುತ್ತಿದ್ದರು. ಅವತ್ತು ನಾನು ಮಂತ್ರಿ ಆಗದೇ ಹೋಗಿದ್ದರೆ ನಾನು ಇವತ್ತು ಎರಡನೇ ಬಾರಿ ಮುಖ್ಯಮಂತ್ರಿ ಆಗಲು ಸಾಧ್ಯವಿರಲಿಲ್ಲ. ಇದೇ ಕೆಲವರಿಗೆ ಹೊಟ್ಟೆ ಉರಿ ಎಂದು ಟೀಕಿಸಿದರು.
ನಾನು ರಾಚಯ್ಯನವರ ಪ್ರಾಡಕ್ಟ್: ಮೈಸೂರು, ಚಾಮರಾಜನಗರ ಜಿಲ್ಲೆಯ ಬಹುತೇಕ ಕಾಂಗ್ರೆಸ್ ಮುಖಂಡರು ರಾಚಯ್ಯನವರ ಪ್ರಾಡಕ್ಟ್ಗಳು, ನಾನೂ ರಾಚಯ್ಯನವರ ಪ್ರಾಡಕ್ಟ್. ರಾಚಯ್ಯ ಸ್ಮಾರಕದಲ್ಲಿ ಐಎಎಸ್ ಮತ್ತು ಐಪಿಎಸ್ ತರಬೇತಿ ಕೇಂದ್ರ ಸ್ಥಾಪಿಸಲು ಸರ್ಕಾರದ ನೆರವನ್ನು ಶಾಸಕ ಕೃಷ್ಣಮೂರ್ತಿ ಅವರು ಕೇಳಿದ್ದಾರೆ. ಈ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಇಡ್ಲಿ- ದೋಸೆ ಇರಲಿಲ್ಲ: ನಮಗೆ ಮನೆಯಲ್ಲಿ ತಂಗಳು ಇರ್ತಿತ್ತೇ ಹೊರತು, ಇಡ್ಲಿ, ದೋಸೆ, ಉಪ್ಪಿಟ್ಟು ಏನೂ ಇರ್ತಾ ಇರ್ಲಿಲ್ಲ. ರಾತ್ರಿ ಉಳಿದ ಮುದ್ದೆಗೆ ಮಜ್ಜಿಗೆ ಬೆರೆಸಿ ತಂಗಳು ತಿಂತಾ ಇದ್ವಿ. ರಾಚಯ್ಯ ಅವರ ಮನೆಯಲ್ಲೂ ಇಡ್ಲಿ ದೋಸೆ ಇರ್ತಿಲಿಲ್ಲ ಅಂತ ಕಾಣ್ತದೆ. ಅವರೂ ನನ್ನಂಗೆ ತಂಗಳು ತಿಂದು ಗಟ್ಟಿಯಾಗಿದ್ದರು ಎಂದು ಎಂದು ಸ್ಮರಿಸಿದರು.
ಇದನ್ನೂ ಓದಿ: ಆರೋಪಗಳ ವಿರುದ್ಧ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸಿದ್ದ : ಮುಖ್ಯಮಂತ್ರಿ ಸಿದ್ದರಾಮಯ್ಯ - CM Vists Chamundeshwari Temple