ನೆಲಮಂಗಲ (ಬೆಂಗಳೂರು ಗ್ರಾಮಾಂತರ): ಆಡಳಿತಾತ್ಮಕ ದೃಷ್ಟಿಯಿಂದ ಮಾಗಡಿ ತಾಲೂಕಿನ ಸೋಲೂರು ಹೋಬಳಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿಗೆ ಸೇರಿಸಬೇಕೆಂಬ ಕೂಗು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
ಸೋಲೂರು ಹೋಬಳಿ ನೆಲಮಂಗಲ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟಿದ್ದು, ಇಲ್ಲಿನ ಜನರು ಸರ್ಕಾರಿ ಕೆಲಸಗಳಿಗೆ ಮಾಗಡಿ ತಾಲೂಕು ಕಚೇರಿ ಮತ್ತು ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಹಾಗೂ ಶಾಸಕರಿಗೆ ಸಂಬಂಧಪಟ್ಟ ಕೆಲಸ ಕಾರ್ಯಗಳಿಗೆ ನೆಲಮಂಗಲಕ್ಕೆ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಇದೆ. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಸೋಲೂರು ಹೋಬಳಿಯನ್ನು ನೆಲಮಂಗಲ ತಾಲೂಕಿಗೆ ಸೇರಿಸಬೇಕೆಂದು ಸೋಲೂರು ಹೋಬಳಿ ಜನರ ಒತ್ತಾಯ.
ಈ ವಿಚಾರವಾಗಿ ನೆಲಮಂಗಲ ಶಾಸಕ ಎನ್.ಶ್ರೀನಿವಾಸ್ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುತ್ತಿದ್ದಾರೆ. ಇದರ ನಡುವೆ ಸಂಸದ ಡಾ.ಕೆ.ಸುಧಾಕರ್ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವುದು ಚರ್ಚೆಗೆ ಗ್ರಾಸವಾಗಿದ್ದು, ಸೋಲೂರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸೇರಿಸುವ ಕುರಿತಾಗಿ ಇಬ್ಬರ ನಡುವೆ ಕ್ರೆಡಿಟ್ ವಾರ್ ನಡೆಯುತ್ತಿದೆ.
ನೆಲಮಂಗಲದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದ ಡಾ.ಕೆ.ಸುಧಾಕರ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, "ಸೋಲೂರು ಹೋಬಳಿಯನ್ನು ನೆಲಮಂಗಲಕ್ಕೆ ಸೇರಿಸಲು ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ನನ್ನ ಬಳಿ ನೆಲಮಂಗಲದ ಶಾಸಕ ಎನ್.ಶ್ರೀನಿವಾಸ್ ಹಲವು ಬಾರಿ ಓಡಾಡಿದ್ದಾರೆ. ಈ ವಿಚಾರ ಕೇಳಿ ಸಂಸದರು ಹೆಸರು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಸೋಲೂರು ನೆಲಮಂಗಲಕ್ಕೆ ಸೇರಿಸುವ ಪೂರ್ಣ ಕ್ರೆಡಿಟ್ ಶಾಸಕ ಎನ್.ಶ್ರೀನಿವಾಸ್ಗೆ ಮಾತ್ರ ಸಲ್ಲಬೇಕು" ಎಂದು ಹೇಳಿದರು.
ಇದನ್ನೂ ಓದಿ: ಮುಡಾ ಪ್ರಕರಣ: ಮೂಲ ಜಮೀನಿನಲ್ಲಿ ಸ್ನೇಹಮಯಿ ಕೃಷ್ಣ ಸಮ್ಮುಖದಲ್ಲಿ ಮಹಜರು ನಡೆಸಿದ ಲೋಕಾಯುಕ್ತ ಪೊಲೀಸರು - Snehamai Krishna