ಮಂಗಳೂರು: ಭಾನುವಾರ ಮುಂಜಾನೆ ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಜ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ಮರಣೋತ್ತರ ಪರೀಕ್ಷೆಗೆ ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.
ಭಾನುವಾರ ಬೆಳಗ್ಗೆ ಉಡುಪಿ- ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುಮ್ತಾಜ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೆ, ಕಾರಿನ ಮುಂಭಾಗದ ಬಲಬದಿ ಅಪಘಾತದಿಂದ ಹಾನಿಯಾಗಿತ್ತು. ನಿನ್ನೆ ಮುಂಜಾನೆ 3 ಗಂಟೆ ಸುಮಾರಿಗೆ ಮುಮ್ತಾಜ್ ಅಲಿ ತನ್ನ ಕಾರಿನಲ್ಲಿ ಮನೆಯಿಂದ ಹೊರಟು ನಗರದೆಲ್ಲೆಡೆ ಸುತ್ತಾಡಿದ್ದು, 5 ಗಂಟೆ ಸುಮಾರಿಗೆ ಕೂಳೂರು ಸೇತುವೆ ಬಳಿ ಕಾರನ್ನು ನಿಲ್ಲಿಸಿದ್ದಾರೆ. ಆ ಬಳಿಕ ನದಿಗೆ ಹಾರಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಆರು ಮಂದಿ ವಿರುದ್ಧ ಪ್ರಕರಣ: ಮುಮ್ತಾಜ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೆದರಿಕೆಯಿಟ್ಟ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) 173ರ ಅಡಿ ಎಫ್ಐಆರ್ ದಾಖಲಾಗಿದೆ.
ಮಹಿಳೆಯನ್ನು ಬಳಸಿಕೊಂಡು ದುರುದ್ದೇಶದಿಂದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶುಐಬ್, ಸತ್ತಾರ್ ಅವರ ಕಾರು ಚಾಲಕ ಸಿರಾಜ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
"ನನ್ನ ಸಹೋದರ ಮುಮ್ತಾಜ್ ಅಲಿ ಸಮಾಜದಲ್ಲಿ ಅತ್ಯಂತ ಗೌರವಾನ್ವಿತ ವ್ಯಕ್ತಿಯಾಗಿದ್ದು, ಕಳೆದ 30 ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿದ್ದರು. ಸಮಾಜ ಸೇವೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಹಲವು ಧಾರ್ಮಿಕ ಸಂಸ್ಥೆಗಳ ಮುಖ್ಯಸ್ಥರಾಗಿದ್ದರು. ಅವರ ಪ್ರಸಿದ್ಧಿಯನ್ನು ಹಾಳು ಮಾಡುವ ಉದ್ದೇಶದಿಂದ ಆರೋಪಿಗಳೆಲ್ಲರೂ ಸೇರಿಕೊಂಡು ಅವರು ಆತ್ಮಹತ್ಯೆಗೆ ಶರಣಾಗುವಂತೆ ಪ್ರಚೋದನೆ ನೀಡಿದ್ದಾರೆ" ಎಂದು ದೂರಿನಲ್ಲಿ ಮೃತ ಮುಮ್ತಾಜ್ ಅಲಿ ಸಹೋದರ ಹೈದರ್ ಅಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ ನಾಪತ್ತೆ: ಕೂಳೂರು ಸೇತುವೆ ಮೇಲೆ ಕಾರು ಪತ್ತೆ - Moidin Bava Brother Missing