ಚಾಮರಾಜನಗರ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಬೆಟ್ಟಕ್ಕೆ ಲಕ್ಷಾಂತರ ಜನರು ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದಾರೆ.
ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪಾದಯಾತ್ರೆ ಮೂಲಕ ಬರುವ ಭಕ್ತಾದಿಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಶುಕ್ರವಾರ, ಶನಿವಾರದಿಂದ ಲಕ್ಷಾಂತರ ಸಂಖ್ಯೆಯಲ್ಲಿ ಕನಕಪುರ, ರಾಮನಗರ, ಬಿಡದಿ, ಚನ್ನಪಟ್ಟಣ ಗ್ರಾಮದವರು ಕಾವೇರಿ ನದಿ ಸಂಗಮದ ಮೂಲಕ ಆಗಮಿಸುತ್ತಿದ್ದಾರೆ. ಇದಲ್ಲದೇ ಮಂಡ್ಯ ಜಿಲ್ಲೆಯ ವಿವಿಧ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ರಸ್ತೆ ಮೂಲಕ ಕಾಲ್ನಡಿಗೆಯಲ್ಲಿ ಬರುತ್ತಿದ್ದಾರೆ.
ಕಳೆದೆರಡು ವರ್ಷಗಳಿಗೆ ಹೋಲಿಸಿಡಿದರೆ ಈ ವರ್ಷ ಭಕ್ತಾದಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಹರಕೆ ಹೊತ್ತ ಭಕ್ತಾದಿಗಳು ಹಗಲು-ರಾತ್ರಿ, ಚಳಿ-ಬಿಸಿಲೆನ್ನದೆ ಬೆಟ್ಟಕ್ಕೆ ಬರುತ್ತಿದ್ದಾರೆ.

ಭಕ್ತರಿಗೆ ಸೂಕ್ತ ವ್ಯವಸ್ಥೆ:
- ತಾಳಬೆಟ್ಟದಿಂದ ಮಲೆ ಮಹದೇಶ್ವವರ ಬೆಟ್ಟದವರೆಗೆ ಸುಮಾರು 20 ಕಡೆ ಒಂದು ಸಾವಿರ ಲೀಟರ್ ಮಿನಿ ಟ್ಯಾಂಕ್ಗಳನ್ನು ಇಡಲಾಗಿದ್ದು, ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
- ತಾತ್ಕಾಲಿಕ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲಾಗಿದೆ.
- ಐವತ್ತಕ್ಕೂ ಹೆಚ್ಚು ಮೊಬೈಲ್ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ.
- ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ತಾಳು ಬೆಟ್ಟದಲ್ಲಿಯೂ ನೆರಳಿನ ವ್ಯವಸ್ಥೆ ಮಾಡಲಾಗಿದೆ.
ದೇವರ ಗುಡ್ಡರು, ಮಹದೇಶ್ವರ ಭಕ್ತರು ಕಂಸಾಳೆ ಬಾರಿಸುತ್ತಾ, ಯುವಕರು ತಮಟೆ ಬಾರಿಸುತ್ತ ಅಲ್ಲಲ್ಲಿ ಕುಣಿದು ಕುಪ್ಪಳಿಸುತ್ತಾ ಆಗಮಿಸುತ್ತಿದ್ದಾರೆ. ವಯೋವೃದ್ಧರು ಮಾದಪ್ಪನ ಹಾಡುಗಳನ್ನು ಹಾಡಿಕೊಂಡು 'ಉಘೇ ಮಾದಪ್ಪ, ಉಘೇ ಮಾಯಕಾರ' ಎಂದು ಘೋಷಣೆ ಕೂಗಿ ಭಕ್ತಿ ಭಾವದಿಂದ ತೆರಳುತ್ತಿರುವುದು ಸಾಮಾನ್ಯವಾಗಿದೆ.

ನದಿ ನೀರಿನ ಹರಿವು ಕಡಿಮೆ: ಮಹದೇಶ್ವರ ಬೆಟ್ಟಕ್ಕೆ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾದಯಾತ್ರಿಕರು ಆಗಮಿಸುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಾವೇರಿ ನದಿಯ ನೀರಿನ ಪ್ರಮಾಣ ಕಡಿಮೆ ಮಾಡುವುದು, ಆ ಮಾರ್ಗದಲ್ಲಿ ಕಾಡುಪ್ರಾಣಿಗಳಿಂದ ರಕ್ಷಣೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಮನಗರ ಜಿಲ್ಲಾಧಿಕಾರಿಗಳಿಗೆ ಜನವರಿ 28ರಂದು ಪತ್ರ ಬರೆದು ಸೂಚನೆ ನೀಡಿದ್ದರು.

ಸ್ಥಳದಲ್ಲಿಯೇ ತಹಸೀಲ್ದಾರ್ ಮೊಕ್ಕಾಂ: ಕನಕಪುರ ತಹಸೀಲ್ದಾರ್ ಮಂಜುನಾಥ್ ನೇತೃತ್ವದಲ್ಲಿ ಕಂದಾಯ, ಅರಣ್ಯ, ಗ್ರಾಮ ಪಂಚಾಯಿತಿ, ಅಗ್ನಿಶಾಮಕ, ಪೊಲೀಸ್ ಇಲಾಖೆ ಸೇರಿದಂತೆ ಇನ್ನೂರಕ್ಕೂ ಹೆಚ್ಚು ಸಿಬ್ಬಂದಿಗಳು ಸ್ಥಳದಲ್ಲಿಯೇ ಇದ್ದು ಅಗತ್ಯ ಬಂದೋಬಸ್ತ್ ಮಾಡಿಕೊಂಡಿದ್ದಾರೆ. ಇದಲ್ಲದೆ ನೀರಿನಲ್ಲಿ ನಡೆದುಕೊಂಡು ಹೋಗುವುದರಿಂದ ಯಾವುದೇ ಅನಾಹುತಗಳು ಸಂಭವಿಸದಿರಲಿ ಎಂಬ ಮುಂಜಾಗ್ರತೆಯಿಂದ ಎಸ್ಟಿಆರ್ಎಫ್, ಎನ್ಡಿಆರ್ ಎಫ್ ತಂಡದ ಸಿಬ್ಬಂದಿ ಬೊಮ್ಮಸಂದ್ರದ ಬಳಿಯೇ ಠಿಕಾಣಿ ಹೂಡಿದ್ದಾರೆ.
ಈ ಬಾರಿ ಮುಂಜಾಗ್ರತಾ ಕ್ರಮವಾಗಿ ಬೊಮ್ಮಸಂದ್ರದಿಂದ ನದಿ ಮೂಲಕ ನಡೆದುಕೊಂಡು ಬರುತ್ತಿರುವ ಪಾದಯಾತ್ರಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಎಡ ಹಾಗೂ ಬಲಬದಿಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಹಗ್ಗ ಹಿಡಿದುಕೊಂಡಿದ್ದು ಮಧ್ಯದಲ್ಲಿ ಪಾದಯಾತ್ರಿಕರನ್ನು ಸುರಕ್ಷಿತವಾಗಿ ದಾಟಿಸುತ್ತಿದ್ದಾರೆ.
ಇದನ್ನೂ ಓದಿ: ಐತಿಹಾಸಿಕ ಶ್ರೀಗುರು ಕೊಟ್ಟೂರು ಬಸವೇಶ್ವರರ ಅದ್ಧೂರಿ ರಥೋತ್ಸವ