ಬೆಂಗಳೂರು: ಹಾಸನ ಲೈಂಗಿಕ ದೌರ್ಜನ್ಯದ ಮುಂದುವರಿದ ಭಾಗವಾಗಿ ಸಂತ್ರಸ್ತೆಯ ಅಪಹರಣ ಆರೋಪ ಸಂಬಂಧ ಹೊಳೆನರಸೀಪುರ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಶನಿವಾರ ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿದ್ದು, ಪುತ್ರ ಪ್ರಜ್ವಲ್ ರೇವಣ್ಣ ಇಂದು ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕಣ್ಗಾವಲಿರಿಸಲಾಗಿದೆ. ಪ್ರಜ್ವಲ್ ಪತ್ತೆಗಾಗಿ ಈಗಾಗಲೇ ಲುಕ್ಔಟ್ ನೋಟಿಸ್ ಕೂಡಾ ಜಾರಿಯಾಗಿರುವುದರಿಂದ ಅವರು ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದುಕೊಳ್ಳಲು ಎಸ್ಐಟಿ ಸಿದ್ಧತೆ ಮಾಡಿಕೊಂಡಿದೆ.
ಪ್ರಕರಣ ಸಂಬಂಧ ಮತ್ತೆ ಮೂವರು ಸಂತ್ರಸ್ತೆಯರು ಎಸ್ಐಟಿ ತನಿಖಾಧಿಕಾರಿಗಳ ಸಂಪರ್ಕಕ್ಕೆ ಸಿಕ್ಕಿದ್ದು, ಈ ಬಗ್ಗೆ ವಿಚಾರಣೆ ಆರಂಭವಾಗಿದೆ. ವಿಚಾರಣೆಯ ಬಳಿಕ ಪ್ರತ್ಯೇಕ ಕೇಸುಗಳನ್ನು ದಾಖಲಿಸಿಕೊಳ್ಳುವ ಸಾಧ್ಯತೆ ಇದೆ.
ಹಾಸನ ವಿಡಿಯೋ ಪ್ರಕರಣ ಸಂಬಂಧ ಸಾಕಷ್ಟು ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ರೇವಣ್ಣರಿಗೆ ಎಸ್ಐಟಿ ನೋಟಿಸ್ ನೀಡಿತ್ತು. ವಿದೇಶದಲ್ಲಿರುವುದರಿಂದ ವಿಚಾರಣೆಗೆ ಹಾಜರಾಗಲು ಅವರು 7 ದಿನಗಳ ಕಾಲಾವಕಾಶ ಕೋರಿದ್ದರು. ಆದರೆ ಎಸ್ಐಟಿ ಈ ಮನವಿಯನ್ನು ತಿರಸ್ಕರಿಸಿತ್ತು. ಜೊತೆಗೆ ಲುಕ್ಔಟ್ ನೋಟಿಸ್ ಜಾರಿ ಮಾಡಿತ್ತು.
ಇನ್ನೊಂದೆಡೆ, ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ ಅವರನ್ನು ಶನಿವಾರ ಬಂಧಿಸಲಾಗಿದ್ದು, ಇಂದು ನ್ಯಾಯಾಧೀಶರೆದುರು ಹಾಜರುಪಡಿಸಲು ಎಸ್ಐಟಿ ಸಿದ್ಧತೆ ಮಾಡಿಕೊಂಡಿದೆ.
ಇದನ್ನೂ ಓದಿ: ಹೆಚ್.ಡಿ.ರೇವಣ್ಣ ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹೇಳಿದ್ದೇನು? - KIDNAP CASE
ಹೆಚ್.ಡಿ.ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾದ ಬೆನ್ನಲ್ಲೇ ಬೆಂಗಳೂರಲ್ಲಿ ಪ್ರಜ್ವಲ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಸಂಬಂಧ ಮತ್ತೊಂದು ಎಫ್ಐಆರ್ ದಾಖಲಾಗಿತ್ತು. ಸಂತ್ರಸ್ತ ಮಹಿಳೆಯ ಹೇಳಿಕೆ ಆಧರಿಸಿ ಸಿಐಡಿ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬ್ಲ್ಯಾಕ್ ಮೇಲ್ ಮಾಡಿ ನನ್ನ ಮೇಲೆ ಪ್ರಜ್ವಲ್ ರೇವಣ್ಣ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಜೊತೆಗೆ ಗನ್ ತೋರಿಸಿ ನನ್ನ ಮತ್ತು ನನ್ನ ಗಂಡನ ಮುಗಿಸುವುದಾಗಿ ಹೆದರಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದಾರೆ.