ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರನ್ನು ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರು ಹಾಗೂ ಸದಸ್ಯರನ್ನಾಗಿ ನೇಮಿಸಿ ಸಂಪುಟ ದರ್ಜೆ ಸ್ಥಾನಮಾನ ಹಾಗೂ ಸೌಲಭ್ಯಗಳನ್ನು ಒದಗಿಸಿರುವ ಕ್ರಮ ಸಂವಿಧಾನಬಾಹಿರ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಇಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.
ಬೆಂಗಳೂರು ನಿವಾಸಿ ಸೂರಿ ಪಾಯಲ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ವಿಭಾಗೀಯ ಪೀಠ, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಪ್ರಕರಣಲ್ಲಿ ಪ್ರತಿವಾದಿಗಳಾಗಿರುವ ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ಶಾಸಕರಿಗೆ ಹ್ಯಾಂಡ್ ಸಮನ್ಸ್ ನೀಡಿದೆ.
ಅರ್ಜಿಯಲ್ಲಿ ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಪ್ರಾಮುಖ್ಯತೆಗೆ ಸಂಬಂಧಿಸಿದ ಅಂಶಗಳು ಎದುರಾಗಿದ್ದು, ಸಂವಿಧಾದ ಪರಿಚ್ಛೇದ 191ರ ಉಲ್ಲಂಘನೆ ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಅಲ್ಲದೆ, ಪ್ರತಿವಾದಿಗಳಾಗಿರುವ ಶಾಸಕರು ಲಾಭದಾಯಕ ಹುದ್ದೆ ಹೊಂದಿದ್ದು, ಅಧಿಕಾರದಲ್ಲಿ ಮುಂದುವರೆಯುವುದು ಸಂವಿಧಾನದಕ್ಕೆ ವಿರುದ್ಧ. ಈ ಎಲ್ಲ ಅಂಶಗಳಿಗೂ ಪರಿಹಾರ ಕಂಡುಕೊಳ್ಳಬೇಕಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರದಿಂದ ಸಮಗ್ರ ಪ್ರತಿಕ್ರಿಯೆ ಅತ್ಯಗತ್ಯವಿದ್ದು, ನೋಟಿಸ್ ಜಾರಿ ಮಾಡಲಾಗುತ್ತಿದೆ ಎಂದು ತಿಳಿಸಿದ ನ್ಯಾಯಪೀಠ, ವಿಚಾರಣೆಯನ್ನು ಮಾರ್ಚ್ 27ಕ್ಕೆ ಮುಂದೂಡಿತು. ಅಲ್ಲದೆ, ಮಾರ್ಚ್ 18ರ ಅಂತ್ಯದೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬೇಕು ಎಂದು ತಿಳಿಸಿತು.
ಅರ್ಜಿದಾರರು ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಅವಕಾಶ ಸಿಕ್ಕಿಲ್ಲ ಎಂಬ ಕಾರಣದಿಂದ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು, ಅರ್ಜಿಯು ವಿಚಾರಣೆಗೆ ಅರ್ಜಿ ಅರ್ಹವಿಲ್ಲ ಎಂಬ ಅಡ್ವೋಕೇಟ್ ಜನರಲ್ ಅವರ ವಾದವನ್ನು ತಳ್ಳಿ ಹಾಕಿದ ನ್ಯಾಯಪೀಠ, ಅರ್ಜಿಯಲ್ಲಿನ ಅಂಶಗಳು ಸಂವಿಧಾನ ಮತ್ತು ಪ್ರಜಾಸತ್ತಾತ್ಮ ಅಂಶಗಳಿದ್ದು, ಅವುಗಳ ಪರಿಹಾರಕ್ಕಾಗಿ ವಿಚಾರಣೆ ಅಗತ್ಯವಿದೆ ಎಂದು ಹೇಳಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ''ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ಸಚಿವರಿಗೆ ಇರುವ ಸೌಲಭ್ಯಗಳನ್ನು ನಿಗಮ, ಮಂಡಳಿಗಳ ಅಧ್ಯಕ್ಷರು ಮತ್ತು ಸದಸ್ಯರಿಗೆ ವಿತರಣೆ ಮಾಡಿದಂತಾಗಿದೆ. ಸಂವಿಧಾನ ಪರಿಚ್ಛೇದ 164(1)(ಎ)ರ ಪ್ರಕಾರ ಮಂತ್ರಿಮಂಡಲದಲ್ಲಿ ಮುಖ್ಯಮಂತ್ರಿ ಸೇರಿದಂತೆ ಒಟ್ಟು ಸದಸ್ಯರು ಸೇರಿದಂತೆ ಶೇ.15ರಷ್ಟು ಮಾತ್ರ ಇರಬೇಕು ಎಂದು ಮಿತಿ ಹೇರಲಾಗಿದೆ. ಆದರೆ, ಅಧಿಸೂಚನೆ ಹೊರಡಿಸುವ ಮೂಲಕ ನಿಗಮ ಮಂಡಳಿಗಳ ಅಧ್ಯಕ್ಷ ಮತ್ತು ಸದಸ್ಯರಿಗೂ ಸಂಪುಟ ಸ್ಥಾನಮಾನ ನೀಡಿದ್ದು, ಮಿತಿ ಮೀರಿದೆ" ಎಂದು ಪೀಠಕ್ಕೆ ವಿವರಿಸಿದರು.
ಇದನ್ನೂ ಓದಿ: ಕೇಂದ್ರ ನೇಮಕಾತಿಗಳಿಂದ ನ್ಯಾ.ದೇಸಾಯಿ 'ಡಿಬಾರ್' ಆದೇಶ ರದ್ದುಪಡಿಸಿದ ಹೈಕೋರ್ಟ್
ನಿಗಮ ಮಂಡಳಿ ಸದಸ್ಯ ಮತ್ತು ಅಧ್ಯಕ್ಷರಿಗೆ ಸಂಪುಟ ಸ್ಥಾನ ಮಾನ ನೀಡಿರುವುದು, ಸುಪ್ರೀಂ ಕೋರ್ಟ್ನ ಮಾನದಂಡಗಳಿಗೆ ವಿರುದ್ಧವಾಗಿದೆ. ಲಾಭದಾಯಕ ಹುದ್ದೆಯನ್ನು ರಚಿಸುವ ಆಧಾರದ ಮೇಲೆ ನೇಮಕಾತಿ ಮಾಡಿರುವ ನೇಮಕಾತಿ ಅಸಾಂವಿಧಾನಿಕ ಎಂದು ಘೋಷಣೆ ಮಾಡಬೇಕು. ಹೀಗಾಗಿ, ನೇಮಕಗೊಂಡವರನ್ನು ತಕ್ಷಣವೇ ಆಯಾ ಸ್ಥಾನಗಳಿಂದ ತೆಗೆದುಹಾಕಬೇಕು. ಅವರಿಗೆ ವಿತರಿಸುವ ಎಲ್ಲ ಸೌಲಭ್ಯಗಳನ್ನು ಹಿಂಪಡೆಯಬೇಕು ಎಂದು ಕೋರಲಾಗಿದೆ.
ಪ್ರಕರಣದ ಹಿನ್ನೆಲೆ: ಕರ್ನಾಟಕ ವಿಧಾನಸಭೆಯ ಒಟ್ಟು ಸಂಖ್ಯಾಬಲದ ಶೇ.15ರಷ್ಟು ಮಂದಿ ಸಚಿವರಾಗಲು ಅವಕಾಶವಿದೆ. ಅದರಂತೆ 224 ಶಾಸಕರಲ್ಲಿ 34 ಮಂದಿ ಸಚಿವರಾಗಬೇಕು. ಸದ್ಯ ಸಿಎಂ ಸೇರಿ 33 ಮಂದಿ ಸಚಿವರಿದ್ದಾರೆ. ಇದರ ಜೊತೆಗೆ 34 ಮಂದಿ ಶಾಸಕರನ್ನು ನಿಗಮ, ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಿಸಿ, ಅವರಿಗೆ ಸಂಪುಟದ ದರ್ಜೆ ಸ್ಥಾನಮಾನ, ಸೌಲಭ್ಯ, ವೇತನ, ಭತ್ಯೆಗಳನ್ನು ನೀಡಲಾಗಿದೆ. ಇದು ಸಂವಿಧಾನದ ಪರಿಚ್ಛೇದ 164(1)(ಎ) ಇದರ ಸ್ಪಷ್ಟ ಉಲ್ಲಂಘನೆ ಆಗಿದೆ. ಶಾಸಕರಿಗೆ ನಿಗಮ, ಮಂಡಳಿಗಳ ಹುದ್ದೆ ಕೊಡುವುದಕ್ಕೆ ತಕರಾರು ಇಲ್ಲ. ಆದರೆ, ಸಂಪುಟ ದರ್ಜೆ ನೀಡುವುದಕ್ಕೆ ಆಕ್ಷೇಪವಿದೆ. ಅಲ್ಲದೇ, ಲಾಭದಾಯಕ ಹುದ್ದೆಗೆ ಸಂಬಂಧಿಸಿದಂತೆ ಸಂವಿಧಾನದ ಪರಿಚ್ಛೇದ 191ರ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
34 ಮಂದಿ ಶಾಸಕರಿಗೆ ನಿಗಮ, ಮಂಡಳಿ ಅಧ್ಯಕ್ಷ ಹುದ್ದೆ ನೀಡಿ 2024ರ ಜನವರಿ 26ರಂದು ಸರ್ಕಾರ ಹೊರಡಿಸಿರುವ ಹಾಗೂ 8 ಮಂದಿ ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ವಿವಿಧ ಹುದ್ದೆಗಳಿಗೆ ನೇಮಕ ಮಾಡಿ ವಿವಿಧ ದಿನಾಂಕಗಳಂದು ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಬೇಕು. ನೇಮಕಾತಿಯನ್ನು ಸಂವಿಧಾನಬಾರವೆಂದು ಘೋಷಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಇದನ್ನೂ ಓದಿ: ನಿಗಮ, ಮಂಡಳಿಗಳ ಅಧ್ಯಕ್ಷರಾಗಿರುವ ಶಾಸಕರಿಗೂ ಸಂಪುಟ ದರ್ಜೆ ಸ್ಥಾನಮಾನ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ
ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ ವಿರುದ್ಧದ ವಿಚಾರಣೆ ಮುಂದೂಡಿದ ಹೈಕೋರ್ಟ್