ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪ ಸಂಬಂಧ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ಗುರುವಾರ ರದ್ದುಗೊಳಿಸಿತು. ಇದರಿಂದಾಗಿ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿತು. ಅಧಿಕಾರ ವ್ಯಾಪ್ತಿ ಇಲ್ಲದ ನ್ಯಾಯಾಲಯದಲ್ಲಿ ಬೆದರಿಕೆ ಕೇಸ್ ದಾಖಲಿಸಲಾಗಿದೆ. ಹಾಗಾಗಿ ತಾಂತ್ರಿಕ ಕಾರಣಗಳಿಂದಾಗಿ ಕೇಸ್ ರದ್ದುಪಡಿಸಲಾಗುತ್ತಿದೆ ಎಂದು ಪೀಠ ಹೇಳಿದೆ.
ನಿಯಮಮದಂತೆ ಯೋಗೀಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ನಡೆಯುತ್ತಿದ್ದ ನ್ಯಾಯಾಲಯದಲ್ಲೇ ವಿನಯ್ ಕುಲಕರ್ಣಿ ವಿರುದ್ಧ ಸಾಕ್ಷಿಗಳಿಗೆ ಬೆದರಿಕೆ ಪ್ರಕರಣ ದಾಖಲಿಸಬೇಕಿತ್ತು. ಆದರೆ ಮತ್ತೊಂದು ಕೋರ್ಟ್ನಲ್ಲಿ ಖಾಸಗಿ ದೂರು ದಾಖಲಿಸುವಂತಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ಪ್ರಕರಣದ ವಿವರ: ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರ ಜೂ.15ರಂದು ಯೋಗೀಶ್ ಗೌಡ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ ಕೊಲೆಗೈದು ಪರಾರಿಯಾಗಿದ್ದರು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ವಿರುದ್ಧ ಗಂಭೀರ ಆರೋಪಗಳಿವೆ. ಪ್ರಕರಣದ ತನಿಖೆ ನಡೆಸಿದ ಸಿಬಿಐ ಈಗಾಗಲೇ ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಿದೆ. 21 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಪಡಿಸಲಾಗಿದೆ. ದತ್ತಾತ್ರೇಯ, ಆನಂದ್, ಮೋಹನ್ ಮತ್ತು ವಿನಾಯಕ ಹಾಗೂ ಲಕ್ಷ್ಮಿ ಅವರು ಪ್ರತ್ಯಕ್ಷದರ್ಶಿಗಳೆಂದು ಹೇಳಲಾಗಿದೆ. ಆದರೆ ವಿಚಾರಣೆ ವೇಳೆ ಅವರು ಪ್ರತಿಕೂಲ ಸಾಕ್ಷಿಗಳಾಗಿ ನ್ಯಾಯಾಲಯದ ಮುಂದೆ ಸಾಕ್ಷ್ಯ ಹೇಳಿದ್ದಾರೆ. ಹೀಗಾಗಿ, ವಿನಯ್ ಕುಲಕರ್ಣಿ ಸಾಕ್ಷಿಗಳನ್ನು ಬೆದರಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಧಾರವಾಡದ ಪ್ರಧಾನ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್ಸಿ ಕೋರ್ಟ್ನಲ್ಲಿ ವಿನಯ್ ಕುಲಕರ್ಣಿ ವಿರುದ್ಧ ಸಾಕ್ಷಿಗಳಿಗೆ ಬೆದರಿಕೆಯೊಡ್ಡಲಾಗಿದೆ ಎಂದು ಆರೋಪಿಸಿ ಐಸಿಸಿ ಸೆಕ್ಷನ್ 195ಎ ಅಡಿ ಖಾಸಗಿ ದೂರು ದಾಖಲಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.
ವಿನಯ್ ಕುಲಕರ್ಣಿ ಅವರನ್ನು 2020ರ ನವೆಂಬರ್ನಲ್ಲಿ ಬಂಧಿಸಿ, ಒಂಬತ್ತು ತಿಂಗಳ ಕಾಲ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು. ಬಳಿಕ ಬಿಡುಗಡೆಯಾಗಿದ್ದರು.
ಇದನ್ನೂ ಓದಿ: ಯೋಗೇಶ್ ಗೌಡ ಕೊಲೆ: ಮಾಫಿ ಸಾಕ್ಷಿ ಪರಿಗಣಿಸಿರುವ ಕ್ರಮ ಪ್ರಶ್ನಿಸಿ ಅರ್ಜಿ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಇದನ್ನೂ ಓದಿ: ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಕಿರುಕುಳ ಪ್ರಕರಣ: ಸಿಐಡಿ ಹೆಗಲಿಗೆ ತನಿಖೆಯ ಹೊಣೆ