ಬೆಂಗಳೂರು : ರಾಜ್ಯ ಮುಖ್ಯ ಮಾಹಿತಿ ಆಯುಕ್ತರು (ಸಿಐಸಿ) ಮತ್ತು ಮಾಹಿತಿ ಆಯುಕ್ತರ (ಐಸಿ) ನೇಮಕಾತಿಗೂ ಮುನ್ನ ಶೋಧನಾ ಸಮಿತಿ ರಚಿಸಿರಲಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಅಲ್ಲದೇ, ಮಾಹಿತಿ ಆಯುಕ್ತರ ನೇಮಕಾತಿಗೆ ತಡೆ ನೀಡಬೇಕು ಎಂದು ಕೋರಿರುವ ಮಧ್ಯಂತರ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ಶೋಧನಾ ಸಮಿತಿ ರಚಿಸದೇ ರಾಜ್ಯ ಮುಖ್ಯ ಮಾಹಿತಿ ಆಯುಕ್ತರ ಮತ್ತು ಮಾಹಿತಿ ಆಯುಕ್ತರ ನೇಮಕ ಮಾಡಿದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರಿನ ಮಲ್ಲಿಕಾರ್ಜುನ ರಾಜು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಆರ್ ದೇವದಾಸ್ ಅವರ ಏಕಸದಸ್ಯ ಪೀಠ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸುಪ್ರೀಂಕೋರ್ಟ್ ನಿರ್ದೇಶನದಂತೆ ಮುಖ್ಯ ಮಾಹಿತಿ ಆಯುಕ್ತರು ಮತ್ತು ಮಾಹಿತಿ ಆಯುಕ್ತರ ನೇಮಕಾತಿಗೂ ಮುನ್ನ ತಮಿಳುನಾಡು ಅಲ್ಲದೇ ಮಹಾರಾಷ್ಟ್ರ, ಹರಿಯಾಣ ಮತ್ತು ತ್ರಿಪುರದಲ್ಲಿ ಶೋಧನಾ ಸಮಿತಿ ರಚಿಸಲಾಗಿದೆ. ಹೀಗಾಗಿ, ಸುಪ್ರೀಂ ಕೋರ್ಟ್ ನಿರ್ದೇಶನಗಳು ಕರ್ನಾಟಕಕ್ಕೆ ಅನ್ವಯಿಸುವುದಿಲ್ಲ ಎನ್ನಲಾಗದು. ರಾಜ್ಯ ಸರ್ಕಾರವು 2024ರ ಜೂನ್ 11ರಂದು ಮುಖ್ಯ ಮಾಹಿತಿ ಆಯುಕ್ತರು ಮತ್ತು ಒಂದು ಮಾಹಿತಿ ಆಯುಕ್ತರ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು.
ಆದರೆ, ಸಿಐಸಿ ಮತ್ತು ಏಳು ಮಾಹಿತಿ ಮಾಹಿತಿ ಆಯುಕ್ತರನ್ನು ನೇಮಿಸಲಾಗಿದೆ. ಇಲ್ಲಿ ಎರಡು ಅಧಿಸೂಚನೆಗಳನ್ನು ಒಟ್ಟುಗೂಡಿಸಿ ಶೋಧನಾ ಸಮಿತಿ ಇಲ್ಲದೇ ನೇಮಕಾತಿ ಮಾಡಲಾಗಿದೆ. ಕಾನೂನು ಪಾಲಿಸದೇ ನೇಮಕ ಮಾಡಿರುವವರು ಪ್ರಮಾಣ ಸ್ವೀಕರಿಸಿ, ಕೆಲಸ ಮಾಡುತ್ತಿರುವುದರಿಂದ ಮಧ್ಯಂತರ ಆದೇಶ ಮಾಡಬೇಕು ಎಂದು ಕೋರಿದ್ದರು.
ಸರ್ಕಾರದ ಪರ ವಕೀಲರ ವಾದವೇನು?: ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ, ಶೋಧನಾ ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿಲ್ಲ. ಶೋಧನಾ ಸಮಿತಿ ರಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದಿಷ್ಟ ನಿರ್ದೇಶನ ನೀಡಿಲ್ಲ. ಶೋಧನಾ ಸಮಿತಿ ರಚಿಸುವುದು ಸೂಕ್ತ ಎಂದು ಹೇಳಿದೆ. ಸುಪ್ರೀಂ ಕೋರ್ಟ್ನಲ್ಲಿ ಕೇಂದ್ರ ಸರ್ಕಾರವು ಪ್ರಕ್ರಿಯೆ ಕುರಿತು ಅಫಿಡವಿಟ್ ಸಲ್ಲಿಸಿದೆ. ಮಾಹಿತಿ ಆಯುಕ್ತರ ಹುದ್ದೆಗೆ ಅರ್ಜಿದಾರ ಮಲ್ಲಿಕಾರ್ಜುನ ರಾಜು ಅರ್ಜಿ ಸಲ್ಲಿಸಿದ್ದು, ಅವರು ತಾನು ಅರ್ಹ ಎಂದು ಹೇಳಬಹುದು. ಈ ನಿಟ್ಟಿನಲ್ಲಿ ತಡೆಯಾಜ್ಞೆ ಪ್ರಶ್ನೆ ಉದ್ಭವಿಸುವುದಿಲ್ಲ. ನೇಮಕಾತಿ ಸಂಬಂಧ ಯಾವುದೇ ಆಕ್ಷೇಪಗಳಿದ್ದರೂ ಅರ್ಜಿದಾರರು ಸುಪ್ರೀಂ ಕೊರ್ಟ್ಗೆ ಹೋಗಬಹುದು. ಯಾವ ಪ್ರಕ್ರಿಯೆ ಅನುಸರಿಸಲಾಗಿದೆ ಎಂಬುದರ ಸಂಬಂಧ ಸುಪ್ರೀಂ ಕೋರ್ಟ್ಗೆ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಬೇಕಿದೆ. ಅದನ್ನು ಸಲ್ಲಿಸಿ ಒಪ್ಪಿಗೆ ಪಡೆಯಲಾಗುವುದು. ಸುಪ್ರೀಂ ಕೋರ್ಟ್ ಪರಿಗಣನೆಗೆ ಅರ್ಜಿ ಒಳಪಟ್ಟಿರುವಾಗ ಈ ಅರ್ಜಿ ಪುರಸ್ಕರಿಸುವುದು ಸೂಕ್ತವಲ್ಲ ಎಂದು ತಿಳಿಸಿದರು.
ಸಿಐಸಿ ಮತ್ತು ಕೆಲ ಮಾಹಿತಿ ಆಯುಕ್ತರ ಪರ ವಕೀಲರು, ಅರ್ಜಿದಾರರು ಸಿಐಸಿ ಹುದ್ದೆಗೆ ಅರ್ಜಿ ಹಾಕಿರಲಿಲ್ಲ. ಸಿಐಸಿಯಾಗಿ ನೇಮಕವಾಗಲು ಆಶಿತ್ ಮೋಹನ್ ಪ್ರಸಾದ್ ಅರ್ಹರಲ್ಲ ಎಂಬುದಕ್ಕೆ ಸಂಬಂಧಿಸಿದಂತೆ ಯಾವುದೇ ಗುಮಾನಿಯೂ ಅರ್ಜಿಯಲಿಲ್ಲ. ಹೀಗಾಗಿ, ಅರ್ಜಿ ವಜಾ ಮಾಡಬೇಕು ಎಂದು ಕೋರಿದರು. ಅಲ್ಲದೇ, ಶೋಧನಾ ಸಮಿತಿ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿಲ್ಲ. ಪ್ರಕರಣದ ವಿಚಾರಣೆಯು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವುದರಿಂದ ಅರ್ಜಿಯು ಊರ್ಜಿತವಾಗುವುದಿಲ್ಲ. ಅದಾಗ್ಯೂ, ನ್ಯಾಯಾಲಯ ಬಯಿಸಿದರೆ ಆಕ್ಷೇಪಣೆ ಸಲ್ಲಿಸಲಾಗುವುದು. ನೇಮಕಾತಿಗೆ ಮಧ್ಯಂತರ ತಡೆ ನೀಡಿದರೆ ಅರ್ಜಿದಾರರು ಸಿಐಸಿ ಆಗುವುದಿಲ್ಲ. ಇದು ರಾಜ್ಯ ಸರ್ಕಾರಕ್ಕೆ ಮಾಡುವ ಮಧ್ಯಂತರ ಹಾನಿಯಾಗುವುದೇ ವಿನಾ ಮಧ್ಯಂತರ ಪರಿಹಾರವಾಗುವುದಿಲ್ಲ. ಇದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದರು. ವಾದ ಆಲಿಸಿದ ನ್ಯಾಯಪೀಠ, ಮಧ್ಯಂತರ ಅರ್ಜಿಯ ವಿಚಾರಣೆ ಕುರಿತು ಆದೇಶ ಕಾಯ್ದಿರಿದೆ.
ನಿವೃತ್ತ ಐಎಎಸ್ ಅಧಿಕಾರಿ ಆತಿಶ್ ಮೋಹನ್ ಪ್ರಸಾದ್ ಮತ್ತು ಮಾಹಿತಿ ಆಯುಕ್ತರನ್ನಾಗಿ ಕೆ ರಾಮನ್, ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ.ಚನ್ನಾಳ, ಎಸ್.ರಾಜಶೇಖರ, ಕೆ ಬದ್ರುದ್ದೀನ್ & ಬಿ ಆರ್ ಮಮತಾ ನೇಮಕ ಮಾಡಿರುವುದಕ್ಕೆ ಮಧ್ಯಂತರ ಪರಿಹಾರದ ಭಾಗವಾಗಿ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಇದನ್ನು ಓದಿ: ತೃತೀಯ ಲಿಂಗಿಗಳ ಮೀಸಲಾತಿ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ