ಬಂಟ್ವಾಳ(ದಕ್ಷಿಣ ಕನ್ನಡ): ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಬಂಟ್ವಾಳದಲ್ಲಿ ನಡೆದ ಜಿಲ್ಲಾ ಮಟ್ಟದ ಅಭಿಮಾನಿಗಳ ಹಕ್ಕೊತ್ತಾಯ ಸಮಾವೇಶದಲ್ಲಿ ಅವರು ಬಹಿರಂಗವಾಗಿಯೇ ಈ ಮಾತು ಹೇಳಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ನೀಡದಿದ್ದರೆ, ಸ್ವತಂತ್ರವಾಗಿ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಹಿಂದುತ್ವದ ಪ್ರಯೋಗ ಶಾಲೆ ಎಂದೇ ಗುರುತಿಸಿಕೊಂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 26 ವರ್ಷಗಳಿಂದ ಹಿಂದುತ್ವ ಮತ್ತು ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗಲು ಪ್ರಾಣ ಒತ್ತೆಯಿಟ್ಟು ದುಡಿದ ನನ್ನಂತಹವರಿಗೆ ಬಿಜೆಪಿ ಈ ಬಾರಿ ಲೋಕಸಭೆಗೆ ಸ್ಪರ್ಧಿಸಲು ಅವಕಾಶ ಸಿಗಬೇಕು ಎಂಬುದು ಸಹಸ್ರಾರು ಮಂದಿ ಕಾರ್ಯಕರ್ತರ ಒಕ್ಕೊರಲ ಆಗ್ರಹವಾಗಿದೆ ಎಂದು ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದರು.
ಜನಾಗ್ರಹ ಸಮಾವೇಶದಲ್ಲಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಒಬ್ಬರಿಗೆ ಎರಡು ಅಥವಾ ಮೂರು ಅವಧಿಗೆ ಮಾತ್ರ ಸ್ಪರ್ಧಿಸಲು ಅವಕಾಶ ನೀಡಬೇಕು. ಮಾತ್ರವಲ್ಲದೇ ಪಕ್ಷಾಂತರಿಗಳು ಬಲಿಷ್ಠ ಸಮುದಾಯಗಳಿಗೆ ಮನೆ ಹಾಕುವ ಬದಲಾಗಿ ಹಿಂದುತ್ವ ಮತ್ತು ಪಕ್ಷದ ಸಿದ್ಧಾಂತ ಉಳಿವಿಗೆ ಶ್ರಮ ವಹಿಸಿದ ಕಾರ್ಯಕರ್ತರಿಗೆ ಪ್ರಥಮ ಆದ್ಯತೆ ಸಿಗಬೇಕು. ಆ ಮೂಲಕ ರಾಜ್ಯದಲ್ಲಿ ಹಿಂದುತ್ವ ಮತ್ತು ಹಿಂದುಳಿದ ವರ್ಗ ಸಮುದಾಯ ಬಲಿಷ್ಠಗೊಂಡು ಸಾಮಾಜಿಕ ನ್ಯಾಯ ಸಿಗಲು ಸಹಕಾರಿಯಾಗುತ್ತದೆ.
ಕಳೆದ 6 ವರ್ಷಗಳಿಂದ ನನಗೆ ಯಾವುದೇ ಜವಾಬ್ದಾರಿ ನೀಡದೇ ಕಡೆಗಣಿಸಿದ ಪಕ್ಷದ ಕೆಲವೊಂದು ಸ್ವಹಿತಾಸಕ್ತಿ ಹೊಂದಿರುವ ವ್ಯಕ್ತಿಗಳು ಸರ್ಕಾರ ನನಗೆ ನೀಡಿದ್ದ ಭದ್ರತಾ ಸಿಬ್ಬಂದಿಯನ್ನೂ ವಾಪಾಸ್ ಕರೆಸಿಕೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದರು. ಈ ಹಿಂದೆ ಹಲವು ಬಾರಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು ಅವಕಾಶ ತಪ್ಪಿಸಿದ್ದು, ಎಂದಿಗೂ ಒಳ ಒಪ್ಪಂದ ರಾಜಕೀಯ ಮಾಡಿಕೊಳ್ಳದ ನನಗೆ ಈ ಬಾರಿ ಲೋಕಸಭೆಗೆ ಸ್ಪರ್ಧಿಸಲು ಅವಕಾಶ ನೀಡಲೇಬೇಕು ಎಂದು ಅವರು ಆಗ್ರಹಿಸಿದರು.
ಡಾ.ಶ್ಯಾಮ್ಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ, ಡಾ.ವಿ.ಎಸ್.ಆಚಾರ್ಯ ಇವರು ಕಲಿಸಿಕೊಟ್ಟ ಪಕ್ಷದ ತತ್ವ ಸಿದ್ಧಾಂತಗಳಿಗೆ ಧಕ್ಕೆಯಾಗದಂತೆ ದೇಶದೆಲ್ಲೆಡೆ ತ್ರಿವರ್ಣ ಧ್ವಜ ಮತ್ತು ಭಗವಾಧ್ವಜ ಹಾರಾಡುವಂತಾಗಬೇಕು ಎಂದು ಅವರು ಹೇಳಿದರು.
ಉಡುಪಿ ಜಿಲ್ಲಾ ಹಿಂದೂ ಜಾಗರಣ ವೇದಿಕೆ ಮಾಜಿ ಅಧ್ಯಕ್ಷ ಅಚ್ಚುತ ಕಲ್ಮಾಡಿ, ಶಿವಮೊಗ್ಗ ವಿಭಾಗ ಸಹಸಂಚಾಲಕ ಮಂಜುನಾಥ ದಾವಣಗೆರೆ, ಕೊಡಗು ಜಿಲ್ಲಾ ಸಂಚಾಲಕ ಟಿ.ಪಿ.ಗಾಂಧಿ, ಚಿಕ್ಕಮಗಳೂರು ಜಿಲ್ಲಾ ಸಂಚಾಲಕ ಕೆ.ಟಿ.ಮಂಜುನಾಥ, ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಉಪಾಧ್ಯಕ್ಷ ಹವಾಲ್ದಾರ್ ಸುಧೀರ್ ಕುಮಾರ್, ನಾರಾಯಣ ವಿಚಾರ ವೇದಿಕೆ ರಾಜ್ಯ ಕಾರ್ಯಾಧ್ಯಕ್ಷ ನಾಗರಾಜ ಗುತ್ತೇದಾರ್, ಶಿವಮೊಗ್ಗ ಜಿಲ್ಲಾ ಉಪಾಧ್ಯಕ್ಷ ಆದರ್ಶ ಶಿವಮೊಗ್ಗ, ವಿಶ್ವ ಹಿಂದೂ ಪರಿಷತ್ ಸುರತ್ಕಲ್ ಪ್ರಖಂಡ ಅಧ್ಯಕ್ಷ ಭಾಸ್ಕರ ರಾವ್ ಮತ್ತಿತರರು ಮಾತನಾಡಿ, ಜಿಲ್ಲೆಯಲ್ಲಿ ಹಿಂದುತ್ವ ಮತ್ತು ಮೋದಿ ಅಲೆ ನೆಪದಲ್ಲಿ ಹಿಂದುತ್ವಕ್ಕಾಗಿ ದುಡಿದ ನೈಜ ಕಾರ್ಯಕರ್ತರನ್ನು ಕಡೆಗಣಿಸುವ ದುಸ್ಸಾಹಸಕ್ಕೆ ಬಿಜೆಪಿ ಮುಂದಾಗಬಾರದು ಎಂದು ಮನವಿ ಮಾಡಿದರು.
ಪ್ರಮುಖರಾದ ರವಿರಾಜ್ ಬಿ.ಸಿ.ರೋಡು, ಸಂದೀಪ್ ಪಂಪ್ವೆಲ್, ಧನಂಜಯ ಕುಂದಾಪುರ, ಆನಂದ ನಾಯ್ಕ ಭಟ್ಕಳ, ಕೃಷ್ಣಮೂರ್ತಿ ಬೆಂಗಳೂರು, ಕರುಣಾಕರ ಗೌಡ ಬರೆಮೇಲು, ಧನಂಜಯ ಪಟ್ಲ ಪುತ್ತೂರು, ಪ್ರದೀಪ ಬಜಿಲಕೇರಿ, ಸುಕೇಶ ಶೆಟ್ಟಿ ಕಿನ್ನಿಗೋಳಿ, ಪ್ರವೀಣ ಮೂಡಿಗೆರೆ, ಯಶಪಾಲ್ ಸಾಲ್ಯಾನ್, ಜಗದೀಶ ನೆತ್ತರಕೆರೆ, ಜನಾರ್ದನ ಬೆಳ್ತಂಗಡಿ, ನವೀನ ಕೊಟ್ಯಾನ್ ಬಿ.ಸಿ.ರೋಡು ಮತ್ತಿತರರು ಇದ್ದರು. ದಿನೇಶ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.
ಇದನ್ನೂ ಓದಿ: ಬಿಜೆಪಿ -ಜೆಡಿಎಸ್ ಮೈತ್ರಿಯಿಂದ ಬೇಸರಗೊಂಡ ಎಲ್ಲ ಕಾರ್ಯಕರ್ತರಿಗೆ ಕಾಂಗ್ರೆಸ್ಗೆ ಮುಕ್ತ ಆಹ್ವಾನ: ಡಿಕೆಶಿ