ಶಿವಮೊಗ್ಗ: ರಾಜ್ಯಾಧ್ಯಕ್ಷನಾಗಿ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿಲ್ಲ ಎಂಬುದನ್ನು ನಾನು ಒಪ್ಪುವುದಿಲ್ಲ. ನನಗೆ ಯಡಿಯೂರಪ್ಪನವರ ಮಗ ಎಂಬ ಅಹಂಕಾರ ಇಲ್ಲ, ಬದಲಾಗಿ ಹೆಮ್ಮೆ ಇದೆ. ರಾಜ್ಯದಲ್ಲಿ ಯಡಿಯೂರಪ್ಪ, ಶಂಕರಮೂರ್ತಿ, ಅನಂತ ಕುಮಾರ್ ಅವರ ಹೋರಾಟ ಮತ್ತು ಶ್ರಮದಿಂದ ಪಕ್ಷ ಈ ಮಟ್ಟಕ್ಕೆ ಬೆಳೆದಿದೆ. ಕರ್ನಾಟಕ ಬಿಜೆಪಿಯು ದಕ್ಷಿಣ ಭಾರತದ ಹೆಬ್ಬಾಗಿಲು, ಇದನ್ನು ಮುಂದಿನ ದಿನಗಳಲ್ಲಿ ರುಜುವಾತು ಮಾಡುವ ನಿಟ್ಟಿನಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಗುತ್ತಿದ್ದು, ಗುರಿ ತಲುಪುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿಗೆ ಜನ್ಮದಿನ ಶುಭಾಶಯ ಕೋರಿದ ವಿಜಯೇಂದ್ರ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಡಿನ ಜನತೆಯ ಪರವಾಗಿ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ಮೋದಿ ಅವರ ಜನ್ಮದಿನದ ಜೊತೆಗೆ ಕೇಂದ್ರದಲ್ಲಿ ಎನ್ಡಿಎ ಮೂರನೇ ಬಾರಿ ಅಧಿಕಾರಕ್ಕೆ ಬಂದು 100 ದಿನ ಪೂರೈಸಿದೆ. ಮೋದಿ ಅವರು ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಕಳೆದ 10 ವರ್ಷಗಳಲ್ಲಿ ದೇಶ ಸಮಗ್ರ ಅಭಿವೃದ್ಧಿಯಾಗಿದೆ. ಮೂರನೇ ಬಾರಿ ಅವರು ದೇಶದ ಅಧಿಕಾರ ನಡೆಸುತ್ತಿರುವುದನ್ನು ನೋಡುತ್ತಿದ್ದೇವೆ. ವಿಕಸಿತ ಭಾರತ ರೂಪಿಸುವ ಕೈಂಕರ್ಯವನ್ನು ಮಾಡುತ್ತಿದ್ದಾರೆ. 2047ಕ್ಕೆ ಅಭಿವೃದ್ಧಿ ಹೊಂದಿದ ಭಾರತ್ ಮಾಡಬೇಕೆಂಬ ಹಂಬಲವನ್ನು ಹೊಂದಿದ್ದಾರೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್ ಎಂಬ ಧ್ಯೇಯವನ್ನು ಹಿಡಿದುಕೊಂಡಿದ್ದಾರೆ. ಕಳೆದ ನೂರು ದಿನಗಳಲ್ಲಿ 15 ಲಕ್ಷ ಕೋಟಿ ರೂ.ಗಳ ದೀರ್ಘಾವಧಿ ಯೋಜನೆಗೆ ಆದ್ಯತೆ ನೀಡಿದ್ದಾರೆ ಎಂದರು.
ಕೇಂದ್ರ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿದೆ. ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿ ಬಿಡುಗಡೆ ಮಾಡಲಾಗಿದೆ. 9.3 ಕೋಟಿ ರೈತರಿಗೆ ಅನುಕೂಲವಾಗಿದೆ. 12 ಕೋಟಿ ರೈತರಿಗೆ 2 ಕೋಟಿ ನೆರವು ನೀಡಿದ್ದಾರೆ. ರಸ್ತೆ ಸಂಪರ್ಕಕ್ಕೆ 569 ಕೋಟಿ ರೂ. ಮತ್ತು ಬೆಂಗಳೂರು ಮೂರನೇ ಹಂತಕ್ಕೆ ಅನುಮೋದನೆ ನೀಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 1 ಕೋಟಿ ನಗರ ಹಾಗೂ ಗ್ರಾಮೀಣ ಭಾಗಕ್ಕೆ 2 ಕೋಟಿ ಸೇರಿ 3 ಕೋಟಿ ರೂ. ನೀಡಿದ್ದಾರೆ. 2 ಲಕ್ಷ ಮನೆಗಳಿಗೆ ಸೌರ ವಿದ್ಯುತ್ ನೀಡಲಾಗಿದೆ. 40 ಮಿಲಿಯನ್ ಯುವಕರಿಗೆ ಅನುಕೂಲವಾಗುವಂತಹ 2 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ 70 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು, 4.5 ಕೋಟಿ ಕುಟುಂಬದವರಿಗೆ ಈ ಯೋಜನೆ ಅನುಕೂಲಕರವಾಗಿದೆ. ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ಮೂರು ಹೊಸ ಕಾನೂನು ಜಾರಿಗೆ ತರಲಾಗಿದೆ. ಸಮಗ್ರ ಅಭಿವೃದ್ಧಿಯೊಂದಿಗೆ ವಿಕಸಿತ ಭಾರತದ ಕಡೆ ದಾಪುಗಾಲು ಹಾಕುತ್ತಿದ್ದೇವೆ ಎಂದು ವಿಜಯೇಂದ್ರ ತಿಳಿಸಿದರು.