ಚಿಕ್ಕಮಗಳೂರು: ಟಿಕೆಟ್ ಘೋಷಣೆಯಾಗದಿದ್ದರೂ ಜಯಪ್ರಕಾಶ್ ಹೆಗ್ಡೆ ಅಭಿಮಾನಿಗಳು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಪ್ರಾರಂಭಿಸಿದ್ದಾರೆ. ಇನ್ನು ಇದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಕಣಕ್ಕಿಳಿಯುತ್ತಿದ್ದಾರೆ. ಇದರಿಂದಾಗಿ ಕ್ಷೇತ್ರದಲ್ಲಿ ನೇರ ಹಣಾಹಣಿ ಏರ್ಪಡಲಿದೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಾರಿ ಫೈಟ್ ಕಂಡು ಬರುತ್ತಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯ ಪ್ರಕಾಶ್ ಹೆಗ್ಡೆ ಅವರಿಗೆ ಟಿಕೆಟ್ ಘೋಷಣೆಯೇ ಆಗಿಲ್ಲ. ಆದರೆ, ಜಯ ಪ್ರಕಾಶ್ ಹೆಗ್ಡೆ ಪರ ಅಭಿಮಾನಿಗಳು ಪ್ರಚಾರಕ್ಕೆ ಇಳಿದಿದ್ದಾರೆ. ಅವರ ಪರ ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರದ ಪ್ರಚಾರ ಆರಂಭ ಆಗಿದ್ದು, ಈ ಹಿಂದೆ ಸಂಸದರಾಗಿದ್ದ ವೇಳೆ ಕ್ಷೇತ್ರಕ್ಕೆ ತಂದ ಅನುದಾನದ ಕುರಿತು ಪೋಸ್ಟ್ ಮಾಡುತ್ತಿದ್ದಾರೆ.
ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ ಕೊಡುಗೆ ಅಪಾರ ಎಂದು ಪೋಸ್ಟ್ ಹಂಚಿಕೊಳ್ಳಲಾಗಿದೆ. ಈ ಕ್ಷೇತ್ರ ಜಯಪ್ರಕಾಶ್ ಹೆಗ್ಡೆ ಪಾಲಾಗುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ. ಈ ಹಿಂದೆ ಜಯ ಪ್ರಕಾಶ್ ಹೆಗ್ಡೆಗೆ ಕೈ ಕಾರ್ಯಕರ್ತರೇ ತೀವ್ರ ವಿರೋಧ ಮಾಡಿದ್ದರು. ಕಾರ್ಯಕರ್ತರ ವಿರೋಧದ ಮಧ್ಯೆಯೂ ಮತ್ತೊಂದು ವರ್ಗದ ಕಾರ್ಯಕರ್ತರು ಪ್ರಚಾರ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಹೈ ವೋಲ್ಟೇಜ್ ಕ್ಷೇತ್ರವಾಗಿ ಬದಲಾಗುತ್ತಿದೆ.
![K Jayaprakash Hegde Udupi Chikkamagaluru Lok Sabha Elections](https://etvbharatimages.akamaized.net/etvbharat/prod-images/15-03-2024/kn-ckm-01-jayaprakash-hegde-7202347_14032024185016_1403f_1710422416_451.jpg)
ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆ ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿವ ಜಿ. ಪರಮೇಶ್ವರ್ ಹೆಗ್ಡೆ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದರು.
ಸಜ್ಜನ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ 1972ರಲ್ಲಿ ಮೊದಲ ಬಾರಿಗೆ ಬ್ರಹ್ಮಾವರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ನಂತರ ಜನತಾ ದಳ ಸೇರಿದ್ದರು. 1994ರಿಂದ 1996ರವರೆಗೆ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ದೇವೇಗೌಡ ಅವರ ಸಂಪುಟದಲ್ಲಿ ಬಂದರು ಮತ್ತು ಮೀನುಗಾರಿಕೆ ಸಚಿವರಾಗಿ ಕೆಲಸ ಮಾಡಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ನಂತರ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು.
2012ರಲ್ಲಿ ಸಿಎಂ ಆಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಹುದ್ದೆ ತ್ಯಜಿಸಬೇಕಾದಾಗ ಉಡುಪಿ- ಚಿಕ್ಕಮಗಳೂರು ಸಂಸದರಾಗಿದ್ದ ಡಿ.ವಿ.ಸದಾನಂದ ಗೌಡರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು. ಈ ಹಿನ್ನೆಲೆ ಸದಾನಂದ ಗೌಡರ ರಾಜೀನಾಮೆಯಿಂದಾಗಿ ತೆರವಾಗಿದ್ದ ಉಡುಪಿ- ಚಿಕ್ಕಮಗಳೂರು ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಪಕ್ಷದಿಂದ ಸಂಸದರಾಗಿ ಚುನಾಯಿತರಾಗಿ ಆಯ್ಕೆಯಾಗಿದ್ದರು.
2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ, ಸೋಲು ಅನುಭವಿಸಿದ್ದರು. ನಂತರ ಬದಲಾದ ಸನ್ನಿವೇಶದಲ್ಲಿ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಬಿಜೆಪಿ ಸರ್ಕಾರ ಇದ್ದಾಗ ಹೆಗ್ಡೆ ಅವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ರಾಜ್ಯದಲ್ಲಿ ಬಹು ಚರ್ಚೆಗೆ ಗ್ರಾಸವಾಗಿರುವ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿಯನ್ನು ಇತ್ತೀಚೆಗಷ್ಟೇ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದರು.
ಇದನ್ನೂ ಓದಿ: ಉಪಕಾರ ಮಾಡಿದವರ ವಿರುದ್ಧ ಆರೋಪ, ಮಹಿಳೆಯ ದೂರನ್ನು ಕಾನೂನು ರೀತಿ ಎದುರಿಸುತ್ತೇನೆ: ಬಿಎಸ್ ಯಡಿಯೂರಪ್ಪ