ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ಗೆ ಫಿಸಿಯೋಥೆರಪಿ ಮತ್ತು ಬೆನ್ನುಹುರಿ ನೋವಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ. ಬಳ್ಳಾರಿ ಅಥವಾ ಬೆಂಗಳೂರಿನಲ್ಲಿ ಶಸ್ತ್ರಚಿಕಿತ್ಸೆ ನಡೆಸಬಹುದು ಎಂದು ವೈದ್ಯಕೀಯ ವರದಿಯಲ್ಲಿ ತಿಳಿಸಲಾಗಿದೆ ಎಂದು ಹೈಕೋರ್ಟ್ ಹೇಳಿದೆ.
ದರ್ಶನ್ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ಆರಂಭವಾಗುತ್ತಿದ್ದಂತೆ ಪೀಠವು ಮುಚ್ಚಿದ ಲಕೋಟೆಯಲ್ಲಿದ್ದ ವರದಿಯನ್ನು ಪರಿಶೀಲಿಸಿತು.
ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನ ಕುಮಾರ್ ವಾದ ಮಂಡಿಸಿ, “ದರ್ಶನ್ ಅವರ ವೈದ್ಯಕೀಯ ವರದಿಯ ಪ್ರತಿಯನ್ನು ನಮಗೆ ನೀಡಬೇಕು. ಅದನ್ನು ಪರಿಶೀಲಿಸಿ, ಅಗತ್ಯಬಿದ್ದರೆ ಆಕ್ಷೇಪಣೆ ಸಲ್ಲಿಸಲಾಗುವುದು. ಆನಂತರ ವಾದ ಮಂಡಿಸಲಾಗುವುದು” ಎಂದರು.
ಇದಕ್ಕೂ ಮುನ್ನ, ದರ್ಶನ್ ಪರ ಹಿರಿಯ ವಕೀಲ ಸಿ. ವಿ. ನಾಗೇಶ್ ವಾದ ಮಂಡಿಸಿ, “ದರ್ಶನ್ ಅವರು ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದು, ವಿಜಯನಗರ ವೈದ್ಯಕೀಯ ಸಂಸ್ಥೆಯು ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ಹೇಳಿದೆ. ಶಸ್ತ್ರಚಿಕಿತ್ಸೆ ಮಾಡದಿದ್ದರೆ ಮೂತ್ರಪಿಂಡ ಸೇರಿದಂತೆ ಮತ್ತಿತರ ಅಂಗಾಂಗಳಿಗೆ ಸಮಸ್ಯೆಯಾಗಲಿದೆ. ಬಳ್ಳಾರಿಯಲ್ಲಿ ಸೌಲಭ್ಯದ ಕೊರತೆ ಇರುವುದರಿಂದ ಬೆಂಗಳೂರಿನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅನುಮತಿಸಬೇಕು” ಎಂದು ಹೇಳಿದರು.
ವಾದ ಆಲಿಸಿದ ಪೀಠವು ವೈದ್ಯಕೀಯ ವರದಿಯ ಪ್ರತಿಯನ್ನು ವಿಶೇಷ ಸರ್ಕಾರಿ ಅಭಿಯೋಜಕರಿಗೆ ನೀಡಬೇಕು. ಅದನ್ನು ಪರಿಶೀಲಿಸಿ ಅವರು ವಾದ ಮಂಡನೆ ಮಾಡಲಿದ್ದಾರೆ ಎಂದು ವಿಚಾರಣೆಯನ್ನು ಮಂಗಳವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿತು.
ಇದನ್ನೂ ಓದಿ: 7 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಬಂಧನ