ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ, ಕುಟುಂಬಸ್ಥರ ವಿಚಾರಣೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಈಗಾಗಲೇ ಕ್ಲೀನ್ಚಿಟ್ ನೀಡಿದ್ದಾರೆ. ಮುಖ್ಯಮಂತ್ರಿ ಒಳಗೊಂಡಂತೆ ನಾಲ್ವರ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಗುರುವಾರ (ಇಂದು) ಮೈಸೂರು ಲೋಕಾಯುಕ್ತ ಅಧಿಕಾರಿಗಳು ತನಿಖಾ ವರದಿ ಸಲ್ಲಿಸಿದ್ದಾರೆ.
11,200 ಪುಟಗಳ ವರದಿ ಸಲ್ಲಿಕೆ: ಭ್ರಷ್ಟಾಚಾರ ನಿಗ್ರಹ ಕಾಯ್ದೆ, ಬೇನಾಮಿ ಆಸ್ತಿ ವಹಿವಾಟು ತಡೆ ಕಾಯ್ದೆ ಹಾಗೂ ಕರ್ನಾಟಕ ಭೂ ಕಬಳಿಕೆ ಕಾಯ್ದೆಗಳು ಒಳಗೊಂಡಂತೆ ವಿವಿಧ ಐಪಿಸಿ ಸೆಕ್ಷನ್ಗಳಡಿ ಸಿದ್ದರಾಮಯ್ಯ, ಪತ್ನಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ಜಮೀನು ಮಾಲೀಕ ದೇವರಾಜ್ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿತ್ತು. ತನಿಖೆ ನಡೆಸಿದ ಮೈಸೂರು ಲೋಕಾಯುಕ್ತ ತನಿಖಾಧಿಕಾರಿ ಎಸ್ಪಿ ಉದೇಶ್ ಸುಮಾರು 11,200 ಪುಟಗಳ 27 ಸಂಪುಟ ಹೊಂದಿರುವ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.
ತನಿಖಾ ವರದಿಯಲ್ಲಿ 50 ಮಂದಿ ಹೇಳಿಕೆಗಳನ್ನು ನಮೂದಿಸಲಾಗಿದೆ. ವರದಿ ಜೊತೆಗೆ ಕೆಲ ದಾಖಲಾತಿಗಳನ್ನೂ ಸಲ್ಲಿಸಲಾಗಿದ್ದು, ವರದಿ ಸ್ವೀಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ಮುಂದೂಡಿದೆ.
ಪ್ರಕರಣವು ಸಿವಿಲ್ ಸ್ವರೂಪದಾಗಿದ್ದು, ತನಿಖೆ ನಡೆಸಲು ತಕ್ಕುದಲ್ಲ. ಕಾನೂನಿನ ತಪ್ಪು ತಿಳುವಳಿಕೆ, ಕ್ರಮ ಜರುಗಿಸಲು ಸರಿಯಾದದ್ದು ಅಲ್ಲ. ಪ್ರಮುಖವಾಗಿ ಸಾಕ್ಷ್ಯಾಧಾರಗಳ ಕೊರತೆ ಕಂಡು ಬಂದಿದೆ. ಇದರಂತೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು. ವರದಿ ಬಗ್ಗೆ ಆಕ್ಷೇಪಣೆಗಳಿದ್ದರೆ ಒಂದು ವಾರದೊಳಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಬಹುದು ಎಂದು ಅಧಿಕಾರಿಗಳು ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಬುಧವಾರ ನೋಟಿಸ್ ಜಾರಿ ಮಾಡಿದ್ದರು.
ಮುಡಾದಿಂದ 2016ನೇ ಸಾಲಿನಿಂದ 2024ರವರೆಗೆ 50:50ರ ಅನುಪಾತದಲ್ಲಿ ಪರಿಹಾರಾತ್ಮಕ ನಿವೇಶನಗಳ ನೀಡಿರುವ ಆರೋಪಗಳ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ, ಸಿಆರ್ಪಿಸಿ ಕಲಂ 173 ಅಡಿ ಹೆಚ್ಚುವರಿ ಅಂತಿಮ ವರದಿಯನ್ನು ಕೋರ್ಟ್ಗೆ ಸಲ್ಲಿಸಲಾಗುವುದು ಎಂದು ನೋಟಿಸ್ನಲ್ಲಿ ತನಿಖಾಧಿಕಾರಿಗಳು ತಿಳಿಸಿದ್ದರು.
ಕಾನೂನುಬಾಹಿರವಾಗಿ 14 ನಿವೇಶನಗಳನ್ನು ಪಡೆಯಲಾಗಿದೆ ಎಂದು ಆರೋಪಿಸಿ, ತನಿಖೆ ನಡೆಸಬೇಕೆಂದು ಕೋರಿ ರಾಜ್ಯಪಾಲರಿಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ರಾಜ್ಯಪಾಲರು ಪರಿಶೀಲಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರು. ತನಿಖೆಗೆ ಅನುಮತಿ ದೊರೆಯುತ್ತಿದ್ದಂತೆ ಸಿಎಂ ಕುಟುಂಬಸ್ಥರು ಒಳಗೊಂಡಂತೆ ಇನ್ನಿತರರ ವಿರುದ್ಧ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್ ದಾಖಲಿಸಿಕೊಂಡಿದ್ದರು.
ಇದನ್ನೂ ಓದಿ: ಮುಡಾ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆ; ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಲೋಕಾಯುಕ್ತ ಕ್ಲೀನ್ ಚಿಟ್
ಇದನ್ನೂ ಓದಿ: ಮುಡಾದಲ್ಲಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್: ಬಿಜೆಪಿ ನಾಯಕರು ಹೇಳಿದ್ದಿಷ್ಟು