ಬೆಳಗಾವಿ: ಗಡಿ ವಿವಾದ ಪ್ರಕರಣವನ್ನು ಮಹಾರಾಷ್ಟ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇಂದು ಮುಂಬೈನಲ್ಲಿ ಸಿಎಂ ಏಕನಾಥ ಶಿಂಧೆ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿದೆ.

ಮುಂಬೈನಲ್ಲಿರುವ ಮಹಾರಾಷ್ಟ್ರ ಮಂತ್ರಾಲಯ(ವಿಧಾನಸೌಧ)ದ ಕಚೇರಿ ಆವರಣದಲ್ಲಿರುವ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಮಧ್ಯಾಹ್ನ 2ಕ್ಕೆ ಸಭೆ ನಿಗದಿ ಆಗಿದೆ. ಸಭೆಗೆ ಬೆಳಗಾವಿಯ ಎಂಇಎಸ್ ಕಾರ್ಯಕರ್ತರಿಗೆ ಆಹ್ವಾನ ನೀಡಲಾಗಿದ್ದು, ಸಭೆಯ ನೇತೃತ್ವವನ್ನು ಸ್ವತಃ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ವಹಿಸಿದ್ದಾರೆ. ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವ ಶಂಭುರಾಜ್ ದೇಸಾಯಿ ಸೇರಿ ಹಲವು ಸಚಿವರು ಸಭೆಯಲ್ಲಿ ಭಾಗಿ ಆಗಲಿದ್ದಾರೆ.
ಸಭೆಯಲ್ಲಿ ಗಡಿವಿವಾದ ಸಂಬಂಧ ಸಂಗ್ರಹಿಸಬೇಕಾದ ಸಾಕ್ಷ್ಯಾಧಾರ, ದಾಖಲೆ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಯಲಿದ್ದು, ಸುಪ್ರೀಂಕೋರ್ಟ್ನಲ್ಲಿ ಗಡಿವಿವಾದ ಸಂಬಂಧ ನೇಮಿಸಿರುವ ವಕೀಲರ ತಂಡದ ಜೊತೆಯೂ ಚರ್ಚೆಗೆ ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ಯಾವುದೇ ಸಮಯದಲ್ಲಿ ಸುಪ್ರೀಂಕೋರ್ಟ್ನಲ್ಲಿ ಗಡಿವಿವಾದ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಗಡಿವಿವಾದವನ್ನು ಗಂಭೀರವಾಗಿ ಪರಿಗಣಿಸಿ ಮಹಾರಾಷ್ಟ್ರ ಸರ್ಕಾರ ಸಭೆ ಮೇಲೆ ಸಭೆ ನಡೆಸುತ್ತಿದೆ. ಆದರೆ, ಕರ್ನಾಟಕ ಸರ್ಕಾರದ ಮೌನ ನಡೆಗೆ ಗಡಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: 'ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ' ಆದೇಶದಲ್ಲಿ ಪ್ರಿಂಟ್ ಮಿಸ್ಟೇಕ್ ಆಗಿತ್ತು: ಸಚಿವ ತಂಗಡಗಿ ಸ್ಪಷ್ಟನೆ