ಬೆಂಗಳೂರು: "ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ವೇಳೆ ಯಾವುದೇ ರೀತಿಯ ರಾಜಕೀಯ ವಿಚಾರಗಳನ್ನು ಚರ್ಚಿಸಿಲ್ಲ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಖರ್ಗೆಯವರು ನನಗೆ ಹಿರಿಯಣ್ಣ ಇದ್ದ ಹಾಗೆ: "ಖರ್ಗೆ ಅವರ ಕುಟುಂಬ ಮತ್ತು ನಮ್ಮ ಕುಟುಂಬ ಒಂದೇ. ರಾಜಕೀಯವನ್ನು ಹೊರತುಪಡಿಸಿ ನನಗೆ ಅವರು ಹಿರಿಯಣ್ಣ ಇದ್ದ ಹಾಗೆ. ನಾವು ಆಗಾಗ್ಗೆ ಭೇಟಿ ಮಾಡುತ್ತಿರುತ್ತೇವೆ. ಈ ವೇಳೆ ಕುಟುಂಬದ ವಿಚಾರಗಳನ್ನು ಮಾತಾಡುತ್ತೇವೆ. ರಾಜಕೀಯ ವಿಚಾರಗಳನ್ನು ಮಾತನಾಡಲು ಹೋಗುವುದಿಲ್ಲ. ನಿನ್ನೆಯ ಭೇಟಿ ವೇಳೆಯೂ ಸಹ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ" ಎಂದು ಹೇಳಿದರು.
ದೆಹಲಿ ನಾಯಕರ ಭೇಟಿ ವಿಚಾರ: ದೆಹಲಿ ನಾಯಕರ ಭೇಟಿಯ ವಿಚಾರಕ್ಕೆ, "ದೆಹಲಿಗೆ ಹೋಗುತ್ತೇನೆ. ಅದರಲ್ಲೇನು ತೊಂದರೆ ಇದೆ?. ನಮ್ಮ ನಾಯಕರನ್ನು ಭೇಟಿ ಮಾಡಿ ಬರುತ್ತೇವೆ. ಅದಕ್ಕೆ ಬೇರೆ ಬೇರೆ ಕಲ್ಪನೆಗಳನ್ನು ಮಾಡಿಕೊಳ್ಳುವ ಅಗತ್ಯವಿಲ್ಲ. ಖರ್ಗೆ ಅವರನ್ನು ಭೇಟಿ ಮಾಡಿರುವ ವಿಚಾರದಲ್ಲಿ ಮುಚ್ಚುಮರೆ ಏನಿದೆ?. ರಾಜಕೀಯ ಚರ್ಚೆ ಮಾಡಿದ್ದರೆ, ಮಾಡಿರುವುದಾಗಿ ಹೇಳುತ್ತಿದ್ದೆ" ಎಂದರು.
ಗೋಯಲ್ ಅವರಿಗೆ ನಾಚಿಕೆಯಾಗಬೇಕು: "ರಾಜ್ಯದ ತೆರಿಗೆ ಪಾಲು ಕೇಳಿದರೆ ಸಣ್ಣತನ ಎಂದಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ನಾಚಿಕೆಯಾಗಬೇಕು. ಈ ದೇಶದಲ್ಲಿ ಯಾವ ರೀತಿಯ ಆಡಳಿತ ನಡೆಯುತ್ತಿದೆ ಅನ್ನೋದನ್ನು ಸ್ವಲ್ಪ ಅರ್ಥ ಮಾಡಿಕೊಂಡು ವಿಶ್ಲೇಷಣೆ ಮಾಡಿಕೊಂಡರೆ ಒಳ್ಳೆಯದು. ಫೆಡರಲ್ ವ್ಯವಸ್ಥೆಯಲ್ಲಿ ತೆರಿಗೆ ಪಾಲು ಯಾವ ರೀತಿ ಹಂಚಿಕೆಯಾಗಬೇಕು ಎಂಬುದರ ಬಗ್ಗೆ ನಿಯಮ ಮಾಡಿಟ್ಟಿದ್ದಾರೆ. ಹೆಚ್ಚು ತೆರಿಗೆ ಕಟ್ಟುತ್ತಿರುವ ಕರ್ನಾಟಕದವರಿಗೆ ಹೆಚ್ಚು ಪಾಲು ನೀಡುವಂತೆ ಕೇಳುತ್ತಿದ್ದೇವೆ" ಎಂದು ಹೇಳಿದರು.
ಮುಂದುವರೆದು, "ಇದಕ್ಕೆ ಗೋಯಲ್ ಅವರು ಸಣ್ಣತನ ಅಂತ ಹೇಳುತ್ತಾರೆ. ನಮ್ಮ ರಾಜ್ಯವನ್ನು ಪ್ರತಿನಿಧಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕ ದಿವಾಳಿ ಆಗಿದೆ ಎಂದು ಹೇಳುತ್ತಾರೆ. ಒಬ್ಬ ಜವಾಬ್ದಾರಿ ಸ್ಥಾನದಲ್ಲಿರುವ ಸಚಿವೆ ಆ ರೀತಿ ಮಾತನಾಡಬಾರದು. ಇದೆಲ್ಲಾ ರಾಜಕಾರಣದಲ್ಲಿ ಸರಿಯಲ್ಲ. ಒಂದು ವ್ಯವಸ್ಥೆ ಮಾಡಿಟ್ಟಿದ್ದಾರೆ. ಆ ವ್ಯವಸ್ಥೆಯಲ್ಲಿ ನಾವೆಲ್ಲ ಹೋಗಬೇಕು. ವ್ಯವಸ್ಥೆ ಬದಲಾವಣೆ ಮಾಡಿಕೊಳ್ಳಲಿ. ಕೇಂದ್ರಕ್ಕೆ ಬಂದಿರುವ ತೆರಿಗೆ ಯಾರಿಗೂ ಕೊಡುವುದಿಲ್ಲ ಎಂದು ನಿಯಮ ಮಾಡಲಿ" ಎಂದರು.
ಜಾತಿಗಣತಿ ವರದಿ: "ಜಾತಿಗಣತಿ ವರದಿ ಜಾರಿಗೆ ಯಾರೂ ಅಡ್ಡಿಪಡಿಸಿಲ್ಲ. ಆಂತರಿಕವಾಗಿ ಇನ್ನೂ ಚರ್ಚೆಯಾಗಬೇಕಿದೆ. ನಂತರ ಹೊರಗೆ ತರಬೇಕು" ಎಂದರು.
ಮಲೆಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಸಭೆ: "ಮುಖ್ಯಮಂತ್ರಿಗಳು ಆರೋಗ್ಯದ ದೃಷ್ಟಿಯಿಂದ ಸಚಿವ ಸಂಪುಟ ಸಭೆಯನ್ನು ಮುಂದೂಡಿದ್ದಾರೆ. ಫೆ.17ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಸಭೆ ನಡೆಸಲು ನಿರ್ಧರಿಸಿದ್ದಾರೆ. ಆ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸುವ ಕುರಿತು ಹೇಳಿದ್ದಾರೆ" ಎಂದು ತಿಳಿಸಿದರು.
ಇದನ್ನೂ ಓದಿ: ರಾಜ್ಯದ ಸಮಸ್ಯೆ ನಿವಾರಣೆಗೆ ಕೇಂದ್ರದ ಜೊತೆ ಸುಮಧುರ ಬಾಂಧವ್ಯ ಹೊಂದಬೇಕು: ಹೆಚ್.ಡಿ.ಕುಮಾರಸ್ವಾಮಿ - H D KUMARASWAMY