ಬೆಂಗಳೂರು: ಪ್ರೀತಿ ನಿರಾಕರಿಸಿದ ಯುವತಿಯ ಮೇಲಿನ ಸಿಟ್ಟಿಗೆ ಆಕೆಯ ಮನೆಯಲ್ಲಿದ್ದ ಕಾರು, ದ್ವಿಚಕ್ರ ವಾಹನಗಳಿಗೆ ಬೆಂಕಿಯಿಟ್ಟಿದ್ದ ರೌಡಿಶೀಟರ್ ಹಾಗೂ ಆತನ ಸಹಚರರನ್ನು ಸಿಸಿಬಿಯ ಪೂರ್ವ ವಿಭಾಗದ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೌಡಿಶೀಟರ್ ರಾಹುಲ್, ಮುನಿರಾಜ್, ಪ್ರವೀಣ್ ಹಾಗೂ ವಿಲಿಯಮ್ಸ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ರಾಹುಲ್ ಮತ್ತವನ ಸಹಚರರು ಶನಿವಾರ ರಾತ್ರಿ ಸುಬ್ರಹ್ಮಣ್ಯಪುರ ಹಾಗೂ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಗಳಲ್ಲಿರುವ ಮನೆಗಳ ಬಳಿ ಎರಡು ಕಾರುಗಳು ಹಾಗೂ ದ್ವಿಚಕ್ರ ವಾಹನಗಳಿಗೆ ಬೆಂಕಿಯಿಟ್ಟಿದ್ದರು.
9 ವರ್ಷಗಳಿಂದ ಯುವತಿಯೊಬ್ಬಳನ್ನು ರಾಹುಲ್ ಪ್ರೀತಿಸುತ್ತಿದ್ದ. ಆದರೆ, ಇತ್ತೀಚೆಗೆ ರಾಹುಲ್ನ ಸಂಪರ್ಕದಿಂದ ದೂರ ಉಳಿದಿದ್ದ ಯುವತಿ ಆತನನ್ನು ನಿರ್ಲಕ್ಷ್ಯಿಸಲಾರಂಭಿಸಿದ್ದಳು. ಇದರಿಂದ ಸಿಟ್ಟಿಗೆದ್ದ ಆರೋಪಿ ಶನಿವಾರ ರಾತ್ರಿ ತನ್ನ ಸಹಚರರೊಂದಿಗೆ ಚೆನ್ನಮ್ಮನ ಕೆರೆ ಅಚ್ಚುಕಟ್ಟು ವ್ಯಾಪ್ತಿಯಲ್ಲಿರುವ ಯುವತಿಯ ಮನೆ ಬಳಿ ಬಂದು ದ್ವಿಚಕ್ರ ವಾಹನಕ್ಕೆ ಬೆಂಕಿಯಿಟ್ಟಿದ್ದ. ಬಳಿಕ ಸುಬ್ರಹ್ಮಣ್ಯಪುರ ವ್ಯಾಪ್ತಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿರುವ ಯುವತಿಯ ಮತ್ತೊಂದು ಮನೆ ಬಳಿ ತೆರಳಿದ್ದ ರಾಹುಲ್ ಮತ್ತವನ ಸಹಚರರು, ಅಪಾರ್ಟ್ಮೆಂಟ್ನ ಸೆಕ್ಯುರಿಟಿ ಗಾರ್ಡ್ ಬೆದರಿಸಿ ಯುವತಿಯ ಮನೆಯವರ ಕಾರುಗಳ ಬಗ್ಗೆ ತಿಳಿದುಕೊಂಡು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಘಟನೆಯಲ್ಲಿ ಒಟ್ಟು 2 ಕಾರು, ದ್ವಿಚಕ್ರ ವಾಹನ ಬೆಂಕಿಗಾಹುತಿಯಾಗಿದ್ದವು. ಸುಬ್ರಹ್ಮಣ್ಯಪುರ ಹಾಗೂ ಸಿಸಿಬಿ ಪೊಲೀಸರು ಆರೋಪಿಯ ಪತ್ತೆಗೆ ಹುಡುಕಾಟ ಆರಂಭಿಸಿದ್ದರು.
ಆರೋಪಿಯ ಹಿನ್ನೆಲೆ: ಹತ್ಯೆ, ಹತ್ಯೆಯತ್ನ, ದರೋಡೆ, ಸುಲಿಗೆ, ಮಾದಕ ಪದಾರ್ಥಗಳ ಮಾರಾಟ ಸೇರಿದಂತೆ ಬೆಂಗಳೂರು ದಕ್ಷಿಣ ವಿಭಾಗದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ 18ಕ್ಕೂ ಅಧಿಕ ಪ್ರಕರಣಗಳಲ್ಲಿ ರಾಹುಲ್ ಆರೋಪಿಯಾಗಿದ್ದಾನೆ. ಈ ಹಿಂದೆ (2022ರಲ್ಲಿ) ನ್ಯಾಯಾಲಯದಿಂದ ವಾರಂಟ್ ಜಾರಿಯಾದ ಬಳಿಕವೂ ತಲೆಮರೆಸಿಕೊಂಡಿದ್ದ ರಾಹುಲ್, 'ನನ್ನನ್ನು ಬಂಧಿಸಲು ಯಾರಿಗೂ ಸಾಧ್ಯವಿಲ್ಲ, ಪೊಲೀಸರು ತಾಕತ್ತಿದ್ದರೆ ಬಂಧಿಸಲಿ' ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ. ಕೋಣನಕುಂಟೆ ಬಳಿಯಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ಹನುಮಂತನಗರ ಠಾಣೆಯ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಬಳಿಕ ಪಿಎಸ್ಐ ಬಸವರಾಜ್ ಪಾಟೀಲ್ ಆರೋಪಿಯ ಕಾಲಿಗೆ ಗುಂಡು ಹಾರಿಸುವ ಮೂಲಕ ಆರೋಪಿಯನ್ನು ವಶಕ್ಕೆ ಪಡೆದಿದ್ದರು.
ಇದನ್ನೂ ಓದಿ: ಪ್ರೀತಿ ನಿರಾಕರಿಸಿದ ಯುವತಿಯ ಮನೆಯವರ ವಾಹನಗಳಿಗೆ ಬೆಂಕಿಯಿಟ್ಟ ರೌಡಿಶೀಟರ್