ದಾವಣಗೆರೆ: ಮಾಜಿ ಮುಖ್ಯಮಂತ್ರಿಗಳಾದ ದಿ.ಗುಂಡೂರಾವ್, ದಿ.ಬಂಗಾರಪ್ಪ ಹಾಗೂ ವೀರಪ್ಪ ಮೊಯ್ಲಿ ಸಂಪುಟದಲ್ಲಿ ಸಚಿವೆಯಾಗಿ ಸೇವೆ ಸಲ್ಲಿಸಿ 'ಕರ್ನಾಟಕದ ಇಂದಿರಾ ಗಾಂಧಿ' ಎಂದು ಖ್ಯಾತರಾಗಿದ್ದ ನಾಗಮ್ಮ ಕೇಶವಮೂರ್ತಿ (90) ಅವರು ವಯೋಸಹಜ ಕಾಯಿಲೆಯಿಂದ ಶನಿವಾರ ಕೊನೆಯುಸಿರೆಳೆದಿದ್ದಾರೆ. ದಾವಣಗೆರೆ ನಗರದ ಪಿ.ಜೆ.ಬಡಾವಣೆಯ 3ನೇ ಮುಖ್ಯರಸ್ತೆಯಲ್ಲಿರುವ ಸ್ವಗೃಹದಲ್ಲಿ ಇವರು ಕೊನೆಯುಸಿರೆಳೆದಿದ್ದು, ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ರಾಜಕೀಯ ಹಿನ್ನೆಲೆ: ನಾಗಮ್ಮ 1972, 1978 ಮತ್ತು 1989ರಲ್ಲಿ ಮೂರು ಬಾರಿ ಕಾಂಗ್ರೆಸ್ ಶಾಸಕಿಯಾಗಿ ಆಯ್ಕೆಯಾಗಿದ್ದರು. ಗುಂಡೂರಾವ್, ಬಂಗಾರಪ್ಪ ಹಾಗೂ ವೀರಪ್ಪ ಮೊಯ್ಲಿ ಸಂಪುಟದಲ್ಲಿ ಬೃಹತ್ ಕೈಗಾರಿಕೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವೆಯಾಗಿ ಹಾಗೂ ವಿಧಾನಸಭೆ ಉಪಸಭಾಪತಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.
ಗ್ರಾಮಾಂತರ ಪ್ರದೇಶದಲ್ಲಿ ಹೈಸ್ಕೂಲ್ ಆರಂಭಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. 1955ರಲ್ಲಿ ವನಿತಾ ಸಮಾಜ ಸ್ಥಾಪಿಸಿ 50ಕ್ಕೂ ಹೆಚ್ಚು ಅಂಗಸಂಸ್ಥೆಗಳನ್ನು ತೆರೆಯುವ ಮೂಲಕ ಮಹಿಳೆಯರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಿದ್ದರು. ರಾಜಕೀಯಕ್ಕಿಂತಲೂ ಸಮಾಜ ಸೇವೆಯಲ್ಲಿ ಹೆಸರು ಮಾಡಿದ್ದ ನಾಗಮ್ಮ, ಜನರೊಂದಿಗೆ ಹೆಚ್ಚು ಒಡನಾಟ ಇಟ್ಟುಕೊಂಡಿದ್ದರು.
ಇಂದು ಅಂತ್ಯಕ್ರಿಯೆ: ಇಂದು ಮಧ್ಯಾಹ್ನ ಮೂರು ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಪಿ.ಬಿ.ರಸ್ತೆಯ ವೈಕುಂಠಧಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ಮಾಹಿತಿ ದೊರೆತಿದೆ.
ಇದನ್ನೂ ಓದಿ: ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷ, ಸದಸ್ಯರ ನೇಮಕ