ಧಾರವಾಡ: ನಾಡಿನ ಹೆಸರಾಂತ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ (96) ಅವರು ಮಂಗಳವಾರ ರಾತ್ರಿ ನಿಧನ ಹೊಂದಿದ್ದಾರೆ. ಧಾರವಾಡ ಸಪ್ತಾಪುರ ದುರ್ಗಾ ಕಾಲೊನಿಯಲ್ಲಿ ಇವರು ವಾಸವಾಗಿದ್ದರು. ವಯೋಸಹಜ ಖಾಯಿಲೆಗಳ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೂಲತಃ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ ಬಿ.ಕೆ.ಗ್ರಾಮದವರಾಗಿರುವ ಕಾಪಸೆ, 1928ರ ಏಪ್ರಿಲ್ 2ರಂದು ಜನಿಸಿದ್ದರು.
ಮಧುರ ಚೆನ್ನರ ಜೀವನ ಹಾಗೂ ಕೃತಿಗಳ ಕುರಿತು ಅಪಾರ ಅಧ್ಯಯನ ಮಾಡಿದ್ದರು. ಮಧುರ ಚೆನ್ನರ ಕುರಿತಾಗಿಯೇ ಮಹಾಪ್ರಬಂಧ ರಚಿಸಿದ್ದರು. ಅಕ್ಕಮಹಾದೇವಿ, ಅರವಿಂದರು, ಬಸವೇಶ್ವರ, ಹಲಸಂಗಿ ಗೆಳೆಯರು ಇವರ ಪ್ರಮುಖ ಕೃತಿಗಳು. ಮರಾಠಿಯಿಂದಲೂ ಸಹ ಅನೇಕ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಮಕ್ಕಳ ಸಾಹಿತ್ಯದಲ್ಲಿ ಸಾಹಿತ್ಯ ಕೃಷಿ ಮಾಡಿದ್ದಾರೆ. ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿಯೂ ಇವರು ಕಾರ್ಯ ನಿರ್ವಹಿಸಿದ್ದಾರೆ.
![Senior literature Gurulinga Kapase Gurulinga Kapase Kannada Sahitya Akademi Dharwad](https://etvbharatimages.akamaized.net/etvbharat/prod-images/27-03-2024/kn-dwd-2-kapase-death-av-ka10001_27032024100443_2703f_1711514083_808.jpg)
ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳಿಗೆ ಕಾಪಸೆ ಭಾಜನವಾಗಿದ್ದರು. ಬೇಂದ್ರೆ, ಮಧುರ ಚೆನ್ನ ಸೇರಿದಂತೆ ಪ್ರಖ್ಯಾತ ಸಾಹಿತಿಗಳ ಒಡನಾಡಿಯಾಗಿದ್ದ ಇವರು 1945ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿಯೇ ತಮ್ಮೂರಿನ ಶಾಲೆಯ ಶಿಕ್ಷಕರಾಗಿ ಸೇವೆ ಆರಂಭಿಸಿದ್ದರು. ಕಾಲಾನಂತರದಲ್ಲಿ ಧಾರವಾಡಕ್ಕೆ ಬಂದು ನೆಲೆಸಿದ್ದರು.
ಇಂದು ಮಧ್ಯಾಹ್ನ 2ರವರೆಗೆ ದುರ್ಗಾ ಕಾಲೊನಿಯ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಮಾಜಿ ಶಾಸಕ ಎಂ.ಕೃಷ್ಣಾರೆಡ್ಡಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ - M KRISHNAREDDY