ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಗುರುವಾರ ಸಂಜೆ ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊಂಡಿತು.
ರಾತ್ರಿ ಮಹಾಪೂಜೆಯ ಬಳಿಕ ನೀರಿನಲ್ಲಿ ಶ್ರೀ ದೇವರ ದೀಪಾರಾಧನೆಯುಕ್ತ ಪಾಲಕಿ ಉತ್ಸವ ಆರಂಭವಾಯಿತು. ನಂತರ ದೇಗುಲದ ವಠಾರದಲ್ಲಿ ತುಂಬಿಸಿದ ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವವು ನಡೆಯಿತು. ವರ್ಷದಲ್ಲಿ ಒಮ್ಮೆ ಮಾತ್ರ ನಡೆಯುವ ಈ ಉತ್ಸವವು ಬೇರೆ ಯಾವುದೇ ದೇವಳದಲ್ಲಿ ಕಾಣಸಿಗುವುದಿಲ್ಲ.
ಈ ಉತ್ಸವದೊಂದಿಗೆ ಈ ವರ್ಷದ ಚಂಪಾಷಷ್ಠಿ ಉತ್ಸವಗಳು ಸಮಾಪ್ತಿಯಾಯಿತು. ಶ್ರೀ ದೇವಳದ ಗಜರಾಣಿ ಯಶಸ್ವಿನಿ ದೇವಳದಲ್ಲಿನ ನೀರಿನಲ್ಲಿ ನೀರಾಟ ಆಡಿ ಸಂತಸಗೊಂಡಿತು. ಭಕ್ತರೂ ನೀರಿನಲ್ಲಿ ಆನೆಗೆ ನೀರೆರಚುತ್ತಾ ಖುಷಿಪಟ್ಟರು.
ಚಂಪಾಷಷ್ಠಿ ಮಹೋತ್ಸವ ನಡೆದ ನಂತರದಲ್ಲಿ ಕುಮಾರಧಾರ ನದಿಯಲ್ಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ಡಿಸೆಂಬರ್ 8ಕ್ಕೆ ನಡೆದಿತ್ತು. ಆ ದಿನದಂದು ಕೂಡ ಕುಕ್ಕೆ ಸುಬ್ರಹ್ಮಣ್ಯ ದೇವರನ್ನು ಪಲ್ಲಕ್ಕಿಯಲ್ಲಿ ರಥಬೀದಿಗೆ ತಂದು, ನಂತರ ಬಂಡಿ ರಥದಲ್ಲಿ ಕುಮಾರಧಾರಾವರೆಗೆ ಅವಭೃತೋತ್ಸವದ ಸವಾರಿ ಮೆರವಣಿಗೆ ಮೂಲಕ ತರಲಾಯಿತು. ಬಳಿಕ ಕುಮಾರಧಾರ ನದಿಯಲ್ಲಿ ಸುಂದರ ತೆಪ್ಪದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ನಡೆಯಿತು. ಅಂದು ಕೂಡ ನದಿಯಲ್ಲಿ ನೆರೆದ ಭಕ್ತರ ನಡುವೆ ದೇವಳದ ಆನೆ ಎಲ್ಲರ ಪ್ರೀತಿಯ ಯಶಸ್ವಿನಿ ನೀರಾಟವಾಡಿ ಖುಷಿಪಟ್ಟಿತು.
ಕುಮಾರಧಾರದಲ್ಲಿರುವ ದೇವರ ಮೀನುಗಳಿಗೆ ನೈವೇದ್ಯ ಅರ್ಪಿಸಿದ ದೈವ: ಹಲವಾರು ವೈಶಿಷ್ಠ್ಯಗಳನ್ನು ಹೊಂದಿರುವ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರಂತೆ ಮೀನುಗಳು ಜಾತ್ರೆ ನೋಡಲು ಬರುವುದು ಇಲ್ಲಿನ ವಿಶಿಷ್ಠತೆಯಾಗಿದೆ. ಕ್ಷೇತ್ರದಲ್ಲಿ ಪ್ರತಿವರ್ಷ ಚಂಪಾ ಷಷ್ಠಿಯಂದು ನಡೆಯುವ ಜಾತ್ರೋತ್ಸವಕ್ಕೆ ಲಕ್ಷಾಂತರ ಮಂದಿ ಭಕ್ತಾಧಿಗಳು ಆಗಮಿಸಿ ಇಲ್ಲಿನ ವೈಭವಕ್ಕೆ ಸಾಕ್ಷಿಯಾಗುತ್ತಾರೆ. ಹಲವು ಪವಾಡಗಳ ನಾಡಾಗಿರುವ ಸುಬ್ರಹ್ಮಣ್ಯದಲ್ಲಿ ಜಾತ್ರೆಯ ಸಂದರ್ಭ ದೇವಾಲಯದ ಕುಮಾರಧಾರ ಸ್ನಾನ ಘಟ್ಟಕ್ಕೆ ಮೀನುಗಳು ಅತಿಥಿಗಳಾಗಿ ಬರುವುದು ಅವುಗಳಲ್ಲಿ ಒಂದಾಗಿದೆ.
ದೇವಸ್ಥಾನದಲ್ಲಿ ಜಾತ್ರೆಯ ಸಂದರ್ಭ ಕೊಪ್ಪರಿಗೆ ಏರುವ ದ್ವಾದಶಿಯಂದು, ದೂರದ ಏನೆಕಲ್ಲು- ಶಂಕಪಾಲ ಸುಬ್ರಹ್ಮಣ್ಯ ದೇವಸ್ಥಾನದ ಮೀನುಗಳು ಇಲ್ಲಿಗೆ ಬಂದು ಜಾತ್ರೆ ಮುಗಿಯುವವರೆಗೂ ಇಲ್ಲೇ ಕಂಡು ಬರುವ ಈ ಮೀನುಗಳು, ದೇವಸ್ಥಾನದ ಜಾತ್ರೋತ್ಸವದ ಕೊನೆಯಲ್ಲಿ ನಡೆಯುವ ದೈವದ ಕೋಲದ ಬಳಿಕ ತಮ್ಮ ಸ್ವಸ್ಥಾನಕ್ಕೆ ಮರಳುವುದು ಇಲ್ಲಿ ಪ್ರತಿವರ್ಷ ನಡೆಯುವ ವಾಡಿಕೆಯಾಗಿದೆ.
ದೈವವು ನದಿಗೆ ನೈವೇದ್ಯ ಹಾಕಿದ ಬಳಿಕ ಅದನ್ನು ತಿಂದು ಅವುಗಳು ಮತ್ತೆ ಬಂದಲ್ಲಿಗೆ ಮರಳುತ್ತವೆ. ದೇವಸ್ಥಾನದ ಆವರಣದಲ್ಲಿ ನಡೆದ ಪುರುಷರಾಯ ದೈವದ ಕೋಲದ ಬಳಿಕ ದೈವವು ದೇವಸ್ಥಾನದಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಕುಮಾರಧಾರಾ ಸ್ನಾನಘಟ್ಟದ ಬಳಿಗೆ ಬಂದು ದೇವರ ಮೀನುಗಳಿಗೆ ನೈವೇದ್ಯ ಹಾಕುವ ಮೂಲಕ ಜಾತ್ರಾಮಹೋತ್ಸವ ಸಂಪನ್ನಗೊಂಡಿತು.
ಇದನ್ನೂ ಓದಿ: ಕುಮಾರಧಾರ ನದಿಯಲ್ಲಿ ಕುಕ್ಕೆ ದೇವರಿಗೆ ನೌಕಾವಿಹಾರ, ಅವಭೃತೋತ್ಸವ: ಯಶಸ್ವಿನಿಯ ನೀರಾಟಕ್ಕೆ ಮನಸೋತ ಭಕ್ತರು