ಮೈಸೂರು : ಮೈಕ್ರೋ ಫೈನಾನ್ಸ್ ಕಂಪನಿಯವರು ಸಾಲಗಾರರಿಗೆ ನೀಡುತ್ತಿರುವ ಹಿಂಸೆ ಹಾಗೂ ದೌರ್ಜನ್ಯ ನಿಲ್ಲಬೇಕೆಂದು ಒತ್ತಾಯಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಒನಕೆ ಹಿಡಿದು ವಿನೂತನವಾಗಿ ಭಾನುವಾರ ಹಾರ್ಡಿಂಗ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ಈ ವೇಳೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆರೆ ರಾಜ್ಯಗಳ ಕಪ್ಪು ಹಣ ತಂದು ರಾಜ್ಯದ ಜನರಿಗೆ ಹಿಂಸೆ ಕೊಡುವ ಫೈನಾನ್ಸ್ ಕಂಪನಿಗಳ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸಬೇಕು. ರಾಜ್ಯದಲ್ಲಿ ತಲೆ ಎತ್ತಿರುವ ಅಕ್ರಮ ಫೈನಾನ್ಸ್ ಕಂಪನಿಗಳನ್ನು ರದ್ದು ಮಾಡಬೇಕು. ಫೈನಾನ್ಸ್ ಕಂಪನಿಗಳ ವಿರುದ್ಧ ನಿವೃತ್ತ ನ್ಯಾಯಾಧೀಶರನ್ನ ನೇಮಕ ಮಾಡಿ ತನಿಖೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರಹೋರಾಟ ಮಾಡಬೇಕಾಗುತ್ತದೆ. ಕರ್ನಾಟಕ ಬಂದ್ಗೂ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜಾರಿ ನಿರ್ದೇಶನಾಲಯದವರೇ, ನಿಮಗೆ ತಾಕತ್ತಿದ್ದರೆ ಮೈಕ್ರೋ ಫೈನಾನ್ಸ್ನ ಮೇಲೆ ದಾಳಿ ಮಾಡಿ. ಮೈಕ್ರೋ ಫೈನಾನ್ಸ್ ಸಾಲ ದೌರ್ಜನ್ಯ ನಿಲ್ಲಿಸಿ. ಹಿಂಸೆ ಕೊಡಬಾರದು, ಮನೆಗಳಿಗೆ ಬೀಗ ಹಾಕಬಾರದು, ಆತ್ಮಹತ್ಯೆ ಮಾಡಿಕೊಂಡವರಿಗೆ ಒಂದೊಂದು ಕೋಟಿ ರೂ. ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.
ಅಸಲಿಗಿಂತ ಬಡ್ಡಿ ವಸೂಲಿ ಜಾಸ್ತಿಯಾಗಿರುವುದರಿಂದ, ಸಮಗ್ರವಾಗಿ ತನಿಖೆ ಆಗಬೇಕು. ರೌಡಿಗಳ ಮೂಲಕ ಬೆದರಿಕೆ ಹಾಕುವುದು, ಮನೆಗೆ ನುಗ್ಗುವುದು, ಮನೆಗಳಿಗೆ ಬೀಗ ಹಾಕುವುದು ನಿಲ್ಲಬೇಕು. ಇದುವರೆಗೂ ಮೈಕ್ರೋ ಫೈನಾನ್ಸ್ ಸಾಲದಿಂದ ಆಗಿರುವ ಸಾವು-ನೋವುಗಳ ಬಗ್ಗೆ ಉನ್ನತಮಟ್ಟದ ತನಿಖೆ ಆಗಲೇಬೇಕು. ಸರ್ಕಾರ ಇಡೀ ರಾಜ್ಯಾದ್ಯಂತ ತೀವ್ರ ಎಚ್ಚರ ವಹಿಸಬೇಕು. ಆತ್ಮಹತ್ಯೆ ನಿಲ್ಲಬೇಕು, ಮೀಟರ್ ಬಡ್ಡಿ ದುರಂತ ತಪ್ಪಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಬಜೆಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯಕ್ಕೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರಿದೆ. ನಮ್ಮ ಸಂಸದರಿಗೆ ಮಾನ ಮರ್ಯಾದೆ ಇಲ್ಲ. ಹೆಚ್. ಡಿ ಕುಮಾರಸ್ವಾಮಿ ಊರಲ್ಲಿರುವುದೆಲ್ಲ ಮಾತಾಡ್ತಾರೆ, ಇದರ ಬಗ್ಗೆ ಯಾಕೆ ಮಾತನಾಡಿಲ್ಲ? ಜೋಶಿ ಬಹಳ ಮಡಿವಂತ. ಆದರೆ ಬಜೆಟ್ ಬಗ್ಗೆ ಮಾತನಾಡಿಲ್ಲ ಯಾಕೆ? ಶೋಭಾ ಕರಂದ್ಲಾಜೆ ತುಟಿ ಬಿಚ್ಚಿಲ್ಲ ಯಾಕೆ? ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು ನಗರ, ಮೈಸೂರು ಅಭಿವೃದ್ಧಿಗೆ ಹಣವನ್ನು ಕೊಟ್ಟಿಲ್ಲ. ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ರಾಜ್ಯದ ಪರ ಧ್ವನಿ ಎತ್ತದ ಸಂಸದರು, ಕೂಡಲೇ ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕು. ಕೇಂದ್ರ ಹಣಕಾಸು ಮಂತ್ರಿ ಕರ್ನಾಟಕ ರಾಜ್ಯದಿಂದ ಆಯ್ಕೆ ಆದವರು. ಇವರು ರಾಜ್ಯಕ್ಕೆ ಏನೂ ಕೊಡುಗೆ ಕೊಟ್ಟಿಲ್ಲ. ಇವರನ್ನು ಮುಂದಿನ ದಿನಗಳಲ್ಲಿ ಆಯ್ಕೆ ಮಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಬಾರದು : ಸಿಎಂ ಕುರ್ಚಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ನಮ್ಮ ರಾಜ್ಯದಲ್ಲಿ ಇರೋದರಲ್ಲಿ ಒಬ್ಬ ಒಳ್ಳೆಯ ವ್ಯಕ್ತಿ. ಇವರೇ ಕೊನೆಯ ಕೊಂಡಿ, ಈ ಕೊಂಡಿ ಕಳಚಿದರೆ ರಾಜ್ಯ ದಿಕ್ಕೆಟ್ಟು ಹೋಗುತ್ತದೆ. ಸಿದ್ದರಾಮಯ್ಯರನ್ನು ತೆಗೆಯಲು ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್ನ ಕೆಲವರು ಪಿತೂರಿ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಬಾರದು ಎಂದು ಒತ್ತಾಯಿಸಿದರು.
ರಾಜ್ಯಪಾಲರು ಪ್ರಾಸಿಕೂಷನ್ ಕೊಡಬಾರದಿತ್ತು, ರಾಜ್ಯಪಾಲರಿಗೆ ಇರುವ ಈ ಕೆಟ್ಟ ಅಧಿಕಾರ ತೆಗೆಯಬೇಕು. ಇದಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯಬೇಕು. ಸಿದ್ದರಾಮಯ್ಯ ನೂರಾರು ನಾಗರಹಾವುಗಳ ನಡುವೆ ಮಲಗಿದ್ದಾರೆ, ಜೋಪಾನವಾಗಿ ಇರಬೇಕು. ಸಿದ್ದರಾಮಯ್ಯ ಅರೆಸ್ಟ್ ಆದರೂ ರಾಜೀನಾಮೆ ಕೊಡಬೇಡಿ, ಜೈಲಿನಲ್ಲೇ ಇದ್ದು ಆಡಳಿತ ಮಾಡಿ ಎಂದರು.
ಇದನ್ನೂ ಓದಿ : ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ತಪ್ಪಿಸಿ : ವಾಟಾಳ್ ನಾಗರಾಜ್ ಆಗ್ರಹ - MICROFINANCE TORTURE