ಬೆಂಗಳೂರು: ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸರ್ಕಾರಿ ಕೋಟಾದಡಿಯ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆದ (2022ರ ಜುಲೈ 22ರ ಅವಧಿ) ಎಂಬಿಬಿಎಸ್ ವಿದ್ಯಾರ್ಥಿಗಳು ಕಡ್ಡಾಯ ಗ್ರಾಮೀಣ ಸೇವೆ ಅಥವಾ ಬಾಂಡ್ಗಳ ಕಾರ್ಯಗತಗೊಳಿಸುವಿಕೆಯ ಷರತ್ತುಗಳಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಬೆಂಗಳೂರಿನ ಡಾ.ಶರಣ್ಯಾ ಮೋಹನ್ ಸೇರಿದಂತೆ ವಿವಿಧ ರಾಜ್ಯಗಳ ಒಟ್ಟು 447 ವೈದ್ಯರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಅಲ್ಲದೇ, ಕಡ್ಡಾಯ ಗ್ರಾಮೀಣ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಅರ್ಜಿದಾರರಿಗೆ ಸಂಬಂಧಿಸಿದಂತೆ ವೈದ್ಯಕೀಯ ನಿರ್ದೇಶನಾಲಯ 2021ರ ಜೂನ್ 17ರಂದು ಹೊರಡಿಸಿದ್ದ ತಿದ್ದುಪಡಿ ಆದೇಶವನ್ನು (ಕೊರಿಜೆಂಡಮ್) ನ್ಯಾಯಪೀಠ ಅಸಿಂಧುಗೊಳಿಸಿದೆ. ಇದರಿಂದಾಗಿ 2019-2020ರ ಸಾಲಿನಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದ್ದ 447 ಅರ್ಜಿದಾರ ವೈದ್ಯ ವಿದ್ಯಾರ್ಥಿಗಳಿಗೆ ಭಾಗಶಃ ಪರಿಹಾರ ದೊರೆತಂತಾಗಿದೆ.
ಗ್ರಾಮೀಣ ಸೇವೆಯ ಆದೇಶದ ಹಿಂದಿನ ಉದ್ದೇಶವು ಗ್ರಾಮೀಣ, ಬುಡಕಟ್ಟು ಅಥವಾ ಕಷ್ಟಕರ ಪ್ರದೇಶಗಳಲ್ಲಿ ವಾಸ ಮಾಡುವ ನಾಗರಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವುದಾಗಿದೆ. ಇಂತಹ ಪ್ರದೇಶಗಳನ್ನು ಮೇಲ್ನೋಟಕ್ಕೆ ಗಮನಿಸಿದಾಗ ಅವರೆಲ್ಲ ಅಗತ್ಯ ಬಿದ್ದಾಗ ತಕ್ಷಣವೇ ವೈದ್ಯರನ್ನು ತಲುಪಲು ಯಾವುದೇ ಸರಳ ಮಾರ್ಗಗಳಿಲ್ಲ. ಹೀಗಾಗಿ, ವಿದ್ಯಾರ್ಥಿಗಳು ಸರ್ಕಾರದ ಸದಾಶಯದ ಭಾಗವಾಗಬೇಕು ಎಂಬುದಾಗಿ ಪೀಠ ತನ್ನ ಆದೇಶಲ್ಲಿ ತಿಳಿಸಿದೆ.
ಕಡ್ಡಾಯ ಗ್ರಾಮೀಣ ಸೇವೆಯು ಜಗತ್ತಿನ ಯಾವುದೇ ಭಾಗದಲ್ಲಿನ ವೈದ್ಯಕೀಯ ವೃತ್ತಿಗೆ ಹೊರತಾಗಿಲ್ಲ, ವೈದ್ಯರಿಂದ ಗ್ರಾಮೀಣ ಸೇವೆಯನ್ನು ಪ್ರೋತ್ಸಾಹಿಸಲು ವಿಶ್ವ ಆರೋಗ್ಯ ಸಂಸ್ಥೆಯು ಹಲವು ಶಿಫಾರಸುಗಳನ್ನು ಮಾಡಿದೆ. ಕರ್ನಾಟಕ ಶಿಕ್ಷಣ ಸಂಸ್ಥೆಗಳ (ಕ್ಯಾಪಿಟೇಶನ್ ಶುಲ್ಕ ನಿಷೇಧ) ಕಾಯ್ದೆ 1948ರ ಕಲಂ 14ರ ಅಡಿ ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರ ಸ್ವತಂತ್ರವಾಗಿದೆ ಎಂದು ತಿಳಿಸಿರುವ ನ್ಯಾಯಪೀಠ, ಅರ್ಜಿಗಳ ವಿಲೇವಾರಿ ಮಾಡಿ ಆದೇಶಿಸಿದೆ.
ಇದನ್ನೂ ಓದಿ: ಆಟೋ ಪ್ರಯಾಣಕ್ಕೆ ಶೇ.5ರಷ್ಟು ಮಾತ್ರ ಜಿಎಸ್ಟಿ: ಸರ್ಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್ - GST on auto rides