ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಖರ್ಚಿಗಾಗಿ 50 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಉದ್ಯಮಿ ವಿಜಯ್ ತಾತಾ ಕೊಟ್ಟಿರುವ ದೂರಿಗೆ ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಗೌಡ ಅಮೃತಹಳ್ಳಿ ಪೊಲೀಸ್ ಠಾಣೆಗೆ ಪ್ರತಿ ದೂರು ನೀಡಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಜಯ್ ತಾತಾ ಸುಳ್ಳು ದೂರು ನೀಡಿದ್ದಾರೆ ಎಂದು ರಮೇಶ್ ಗೌಡ ಆರೋಪಿಸಿದ್ದಾರೆ.
ಪೊಲೀಸರು ದೂರನ್ನು ಸ್ವೀಕರಿಸಿದ್ದಾರೆ. ಆದರೆ, ಇದುವರೆಗೆ ಯಾವುದೇ ಎಫ್ಐಆರ್ ದಾಖಲಾಗಿಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ದೂರಿನಲ್ಲೇನಿದೆ?: ಆ.24ರಂದು ಮನೆಗೆ ಊಟಕ್ಕೆ ಕರೆದಾಗ ಬೆದರಿಕೆ ಹಾಕಿದ್ದಾರೆ. ತಾನು ಈಗಾಗಲೇ ಉದ್ಯಮದಲ್ಲಿ ನಷ್ಟ ಹೊಂದಿದ್ದೇನೆ. ತನಗೆ 100 ಕೋಟಿ ರೂ. ಬೇಕಿದ್ದು, ನೀವು ಕೊಡಿ, ಇಲ್ಲವಾದರೆ ಹೆಚ್.ಡಿ.ಕುಮಾರಸ್ವಾಮಿ ಹಾಗೂ ನಿಮ್ಮನ್ನು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನಮ್ಮ ಘನತೆಗೆ ಧಕ್ಕೆತರುವ ಉದ್ದೇಶದಿಂದ ನಮ್ಮನ್ನು ದೂಷಿಸಿದ ಮತ್ತು ಮಾನಹಾನಿ ಮಾಡಿದ ಆರೋಪಿಗಳ ವಿರುದ್ಧ ತನಿಖೆ ನಡೆಸುವಂತೆ ದೂರಿನಲ್ಲಿ ರಮೇಶ್ ಗೌಡ ಕೋರಿದ್ದಾರೆ.