ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯನ್ನು ಅಕ್ಟೋಬರ್ ಕೊನೆಯ ವಾರದಿಂದ ನಡೆಸಲು ರಾಜ್ಯ ಕಾರ್ಯಕಾರಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧಿಕಾರವಧಿ ಆಗಸ್ಟ್ 8ಕ್ಕೆ ಮುಕ್ತಾಯವಾಗಿದೆ. ಸೆಪ್ಟೆಂಬರ್ನಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ದಸರಾ ರಜೆ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ತೊಂದರೆ ಆಗಬಹುದು ಎಂಬ ಕಾರಣಕ್ಕೆ ಚುನಾವಣಾ ಸಮಯ ಬದಲಾವಣೆ ಮಾಡಲಾಗಿದೆ. ಹಾಗಾಗಿ ಅಕ್ಟೋಬರ್ನಿಂದ ಚುನಾವಣೆಗಳು ನಡೆಯಲಿವೆ ಎಂದಿದ್ದಾರೆ.
ಅಕ್ಟೋಬರ್ ಕೊನೆಗೆ ಮೊದಲ ಹಂತದಲ್ಲಿ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಸಲಾಗುತ್ತದೆ. ಬಳಿಕ ನವೆಂಬರ್ನಲ್ಲಿ ತಾಲೂಕು ಹಾಗೂ ಜಿಲ್ಲಾ ಘಟಕಕ್ಕೆ ಚುನಾವಣೆ ನಡೆಸಿ, ಕಡೆಯದಾಗಿ ರಾಜ್ಯ ಘಟಕದ ಚುನಾವಣೆಗೆ ನಿರ್ಧರಿಸಲಾಗಿದೆ. ಸದ್ಯದಲ್ಲೇ ಈ ಸಂಬಂಧ ಅಧಿಸೂಚನೆ ಪ್ರಕಟಿಸಲಾಗುತ್ತದೆ ಎಂದು ಷಡಾಕ್ಷರಿ ತಿಳಿಸಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿ: ಹೆಸರುಕಾಳು ದರ ಏರಿಕೆ, ರೈತರ ಮೊಗದಲ್ಲಿ ಮೂಡಿದ ಮಂದಹಾಸ