ಚಾಮರಾಜನಗರ: ಅಡುಗೆ ಮೇಲ್ವಿಚಾರಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದ ಬಿಸಿಎಂ ವಿದ್ಯಾರ್ಥಿನಿಲಯದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದ ಪ್ರಮೋದ್ ಕುಮಾರ್ (29) ಮೃತ ವ್ಯಕ್ತಿ. ಈತ ಬಿಸಿಎಂ ವಿದ್ಯಾರ್ಥಿ ನಿಲಯದ ರೂಮ್ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೇಗೂರಿನ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಂಚಕನ ಬಂಧನ: ವಿವಿಧ ಯೋಜನೆಯಡಿ ಬಡ್ಡಿರಹಿತ ರೂಪದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ, ಸುಮಾರು 21 ಮಂದಿಯಿಂದ ಲಕ್ಷಾಂತರ ರೂ. ಹಣ ವಂಚಿಸಿದ್ದ ಆರೋಪದ ಮೇಲೆ ಹರೀಶ್ ಎಲ್ಲಪ್ಪ ಎಂಬಾತನನ್ನು ಚಾಮರಾಜನಗರದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಸಾಲ ಕೊಡಿಸುವುದಾಗಿ ನಂಬಿಸಿ ಹಂತ - ಹಂತವಾಗಿ ಲಕ್ಷಾಂತರ ರೂ. ಪಡೆದು ವಂಚಿಸಿದ್ದಾನೆಂದು ಈತನ ವಿರುದ್ಧ ಮಹಿಳೆಯೊಬ್ಬರು ಹರೀಶ್ ವಿರುದ್ಧ ದೂರು ಕೊಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮೈಸೂರಿನ ಬಾರ್ವೊಂದರಲ್ಲಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.