ಉಡುಪಿ: ಜಿಲ್ಲೆಯ ಕೋಟ ಪೊಲೀಸ್ ಠಾಣೆ ಎಸ್ಐ ಗುರುನಾಥ ಹಾದಿಮನಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಆದೇಶಿಸಿದ್ದಾರೆ. ಅಕ್ರಮ ಮರಳುಗಾರಿಕೆ ಪ್ರಕರಣವೊಂದರ ಸಂಬಂಧ ಇವರನ್ನು ಅಮಾನತು ಮಾಡಲಾಗಿದೆ.
ಉಡುಪಿಗೆ ಡಾ.ಅರುಣ್ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಂದ ನಂತರ ಇಲಾಖೆಯಲ್ಲಿ ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ಅಮಾನತು ಮುಂದುವರೆದಿದೆ. ಈಗಾಗಲೇ ನಾಲ್ವರು ಎಸ್ಐಗಳ ಸಹಿತ 80ಕ್ಕೂ ಅಧಿಕ ಸಿಬ್ಬಂದಿ ಅಮಾನತುಗೊಂಡಿದ್ದಾರೆ.
ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ ಎಸ್ಐಗಳಾದ ಗುರುನಾಥ ಹಾದಿಮನೆ, ಶಂಭುಲಿಂಗ, ಅಶೋಕ್ ಹಾಗೂ ಸುಷ್ಮಾರನ್ನು ಅಮಾನತು ಮಾಡಲಾಗಿದೆ. ಇವರಲ್ಲಿ, ಕೆಲವರ ಅಮಾನತು ಆದೇಶ ಮುಕ್ತಾಯಗೊಂಡಿದ್ದು, ಹಿಂದೆ ಸೇವೆ ಸಲ್ಲಿಸುತ್ತಿದ್ದ ಠಾಣೆ ಬಿಟ್ಟು ಬೇರೆ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.
ಪೊಲೀಸ್ ಕರ್ತವ್ಯ ಹೊರತುಪಡಿಸಿ ಇತರ ಕರ್ತವ್ಯ ನಡೆಸಿ ಇಲಾಖಾ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಕೆಲವರ ಮೇಲೆ ಈಗಾಗಲೇ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕ್ರಿಯೆ ನಿರಂತರ ಜಾರಿಯಲ್ಲಿರಲಿದೆ. ಪೊಲೀಸರು ಕಾನೂನು ಸುವ್ಯವಸ್ಥೆಗೆ ಒತ್ತು ನೀಡುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಎಸ್ಪಿ ಡಾ.ಅರುಣ್ ಮಾಹಿತಿ ನೀಡಿದ್ದಾರೆ.